ಬೆಂಗಳೂರು : ವಂಚನೆ ಪ್ರಕರಣದ ಆರೋಪಿ ಪರ ಬಂದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ನಕಲಿ ವಕೀಲನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರ 4ನೇ ಹಂತದ ನಿವಾಸಿ ಯೋಗಾನಂದ್ (52) ಬಂಧಿತ ಆರೋಪಿ.
ಪ್ರಭಾವಿ ರಾಜಕಾರಣಿಗಳ ಆಪ್ತೆಯೆಂದು ನಂಬಿಸಿ ವಂಚಿಸಿದ್ದ ಪ್ರಕರಣದ ಆರೋಪಿ ಸವಿತಾಳ ಪರ ವಕೀಲ ಎಂದು ಹೇಳಿಕೊಂಡು ಬಸವೇಶ್ವರ ನಗರ ಠಾಣೆಗೆ ತೆರಳಿದ್ದ ಆರೋಪಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹೈಡ್ರಾಮಾ ಸೃಷ್ಟಿಸಿದ್ದ.
ಪ್ರೊಫೆಸರ್ ಆಗಿರುವ ಯೋಗಾನಂದ್, ಸವಿತಾ ಪರ ವಕೀಲನೆಂದು ಹೇಳಿಕೊಂಡು ಬಸವೇಶ್ವರ ನಗರ ಠಾಣೆ ಬಳಿ ತೆರಳಿದ್ದ. “ಯಾವ ಆಧಾರದಲ್ಲಿ ಬಂಧಿಸಿದ್ದೀರಿ?” ಎನ್ನತ್ತಾ, ಪೊಲೀಸರ ವಶದಲ್ಲಿದ್ದ ಆರೋಪಿ ಸವಿತಾಳ ಬಳಿಯಿದ್ದ ಮನೆ ಬೀಗವನ್ನ ಪಡೆದುಕೊಂಡು ಹೋಗಲು ಯತ್ನಿಸಿದ್ದ. ”ಬೀಗವನ್ನ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ” ಎಂದು ತಡೆದಾಗ ಪೊಲೀಸ್ ಸಿಬ್ಬಂದಿಗಳಿಗೆ ಬೆದರಿಸಿದ್ದ. ಇದೇ ವೇಳೆ ಸ್ಥಳದಲ್ಲಿದ್ದ ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜ್, ಈ ಹಿಂದೆ ತಾವು ಬಸವೇಶ್ವರ ನಗರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಆರೋಪಿಯನ್ನ ವೃದ್ದೆಯ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಬಂಧಿಸಿದ್ದನ್ನು ನೆನಪಿಸಿಕೊಂಡಿದ್ದರು. ಕೂಡಲೇ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಿಸಿದಾಗ ”ತಾನು ವಕೀಲನಲ್ಲ, ಫ್ರೊಫೆಸರ್” ಎಂದು ಬಾಯ್ಬಿಟ್ಟಿದ್ದಾನೆ.
ಠಾಣೆಯ ಬಳಿ ರಂಪಾಟ ಸೃಷ್ಟಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಯೋಗಾನಂದ್ನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಪ್ರಭಾವಿ ರಾಜಕಾರಣಿಗಳ ಸಂಬಂಧಿ ಸೋಗಿನಲ್ಲಿ ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಮಹಿಳೆಯರಿಗೆ 30 ಕೋಟಿಗೂ ಹೆಚ್ಚು ವಂಚನೆ ಮಾಡಿದ್ದ ಸವಿತಾ (49) ಮತ್ತು ಆಕೆಯ ಸಹಚರನಾದ ಪುನೀತ್ (28) ಎಂಬಾತನನ್ನ ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಅವರನ್ನ ಕಿಟ್ಟಿ ಪಾರ್ಟಿಗೆ ಆಹ್ವಾನಿಸುತ್ತಿದ್ದಳು. ಅವರ ಬಳಿ ”ತನಗೆ ಕೆಲ ಪ್ರಭಾವಿ ರಾಜಕಾರಣಿಗಳು ಸಂಬಂಧಿಕರು, ಇನ್ನೂ ಹಲವರ ಪರಿಚಯವಿದೆ” ಎಂದು ನಂಬಿಸಿದ್ದಳು. ಅಲ್ಲದೇ, ತನ್ನ ಪತಿ ಹಾಗೂ ಕೆಲ ಸಂಬಂಧಿಕರು ವಿದೇಶದಲ್ಲಿ ನೆಲೆಸಿದ್ದು, ಅಲ್ಲಿಂದ ಕಡಿಮೆ ಬೆಲೆಗೆ ಚಿನ್ನ ತರಿಸಿ ಕೊಡುವುದಾಗಿ, ಉದ್ಯಮದಲ್ಲಿ ಹೂಡಿಕೆ ಮಾಡಿದರೆ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿದ್ದಳು.
ಆರೋಪಿ ಸವಿತಾಳ ಮಾತು ನಂಬಿ 95 ಲಕ್ಷ ರೂ. ನೀಡಿ ವಂಚನೆಗೊಳಗಾಗಿದ್ದ ಕುಸುಮಾ ಎಂಬುವವರು ಬಸವೇಶ್ವರ ನಗರ ಠಾಣೆಗೆ ದೂರು ನೀಡಿದ್ದರು. ಆರೋಪಿಯು 20ಕ್ಕೂ ಹೆಚ್ಚು ಮಹಿಳೆಯರಿಗೆ ಸುಮಾರು 30 ಕೋಟಿ ರೂ. ವಂಚಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಸವಿತಾ ಮತ್ತು ಪುನೀತ್ನನ್ನ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Laxmi News 24×7