ಬೆಂಗಳೂರು,ಡಿ.21- ಗ್ರಾಪಪಂಚಾಯ್ತಿ ಚುನಾವಣೆಯನ್ನೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭೂಮಿಕೆ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಪದಾಧಿಕಾರಿಗಳ ಸಭೆ ಮೂಲಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೂ ತಯಾರಿ ನಡೆಸಿರುವ ಬಿಜೆಪಿ ಗ್ರಾಪಂ ಚುನಾವಣೆಯನ್ನೇ ಮುಖ್ಯ ಭೂಮಿಕೆ ಮಾಡಿಕೊಳ್ಳಲು ಸಿದ್ಧವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಪ್ರತಿನಿಧಿ ಸಮಾವೇಶ ಆಯೋಜಿಸಲು ನಿರ್ಧರಿಸಿದೆ.
ಆರು ಮಂದಿ ನಾಯಕರ ತಂಡದಿಂದ ರಾಜ್ಯವ್ಯಾಪಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರತಿನಿಧಿಗಳ ಸಮಾವೇಶ ನಡೆಸಲಾಗುತ್ತದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.80ರಷ್ಟು ಬಿಜೆಪಿ ಬೆಂಬಲಿತ ಸದಸ್ಯರನ್ನು ಗೆಲ್ಲಿಸುವ ಗುರಿ ಹೊಂದಿದ್ದು, ಇದರಲ್ಲಿ ಗೆದ್ದವರಿಗೆ ಜಿಲ್ಲಾಪಂಚಾಯತ್ ಚುನಾವಣೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಜನವರಿ 8ರಿಂದ ಜ.11ರವರೆಗೆ ಜನಪ್ರತಿನಿಧಿ ಸಮಾವೇಶ ನಡೆಸಲಿದ್ದು, ಮೂವರು ಉಪಮುಖ್ಯಮಂತ್ರಿಗಳು, ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ತಂಡದಿಂದ ರಾಜ್ಯ ಪ್ರವಾಸ ನಡೆಸಲು ನಿನ್ನೆ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ