ರಾಯಚೂರು: ಬೃಹದಾರದ ಮರವೊಂದು ಬೈಕ್ ಸವಾರರ ಮೇಲೆ ಉರುಳಿಬಿದ್ದ ಪರಿಣಾಮ ಪತಿ-ಪತ್ನಿ ಮೃತಪಟ್ಟಿದ್ದು, ಅವರ ಮಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರಿನ ಮುದಗಲ್ನಲ್ಲಿ ಬುಧವಾರ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಮದರ್ ಥೆರೆಸಾ ಶಾಲೆ ಬಳಿ ಈ ದುರ್ಘಟನೆ ಸಂಭವಿಸಿದೆ.
ಪತಿ ರಮೇಶ್ ಗುಡದಪ್ಪ(26), ಪತ್ನಿ ಮಂಜುಳಾ(23) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಮೂರು ವರ್ಷ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತರನ್ನು ನಾಗಾಲಾಪುರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮುದಗಲ್ ಪಟ್ಟಣದಿಂದ ನಾಗಲಾಪುರ ಸ್ವಗ್ರಾಮಕ್ಕೆ ಮರಳುವ ವೇಳೆ ಈ ಅಪಘಾತ ನಡೆದಿದೆ.
ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಬೃಹತ್ ಮರವನ್ನು ತೆರವುಗೊಳಿಸುವ ಕೆಲಸ ನಡೆದಿದೆ.
ಇನ್ನು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಮುದಗಲ್ ಹಾಗೂ ಸುತ್ತಮುತ್ತಲು ಮಳೆಯಾಗಿದೆ. ಮಳೆಯಿಂದಾಗಿ ಮರ ಬೈಕ್ ಸವಾರರ ಮೇಲೆ ಬಿದ್ದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಜರುಗಿದೆ.
Laxmi News 24×7