ಬೆಂಗಳೂರು (ಡಿ. 22): ಬೆಳ್ಳಂದೂರು ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈ ಕೋರ್ಟ್ ನಿರಾಕರಿಸಿದೆ. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಪೀಠ ಅರ್ಜಿ ವಜಾಗೊಳಿಸಿದೆ. ಅರ್ಜಿಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಮುಖ್ಯಮಂತ್ರಿಗಳು ಮತ್ತೊಮ್ಮೆ ತೊಂದರೆಗೆ ಸಿಲುಕಿದ್ದಾರೆ. ಬೆಳ್ಳಂದೂರು ಡಿನೋಟಿಫಿಕೇಷನ್ ಸಂಬಂಧ 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಈ ಕುರಿತು ಖಾಸಗಿ ದೂರು ದಾಖಲಿಸಿದ್ದರು. ಕೆಐಎಡಿಬಿ ಬೆಳ್ಳಂದೂರಿನಲ್ಲಿ ಭೂಸ್ವಾಧೀನ ಮಾಡಿದೆ ಎಂದು ಅವರು ಆರೋಪಿಸಿದರು. ಈ ಪ್ರಕರಣವನ್ನು ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. 2015 ರಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆರ್.ವಿ ದೇಶಪಾಂಡೆ ವಿರುದ್ಧದ ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್ ಕೂಡಾ ಆದೇಶ ಎತ್ತಿಹಿಡಿದಿತ್ತು.
2007-08ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಂದೂರುಮ ವೈಟ್ಫೀಲ್ಡ್ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದಾರ ಎಂದು ದೂರು ಸಲ್ಲಿಸಲಾಗಿತ್ತು. ಈ ಪ್ರಕರಣ ರದ್ದು ಕೋರಿ ಬಿಎಸ್ವೈ ಹೈ ಕೋರ್ಟ್ ಮೆಟ್ಟಿಲೇರಿದ್ದರು.