ಮಳೆ ಅಬ್ಬರ: ಇಂದು ಶಿವಮೊಗ್ಗ ಜಿಲ್ಲಾದ್ಯಂತ, ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ
ಶಿವಮೊಗ್ಗ: ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶನಿವಾರ (ಇಂದು) ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಅರೆಂಜ್ ಅಲರ್ಟ್ ಘೋಷಿಸಿದೆ. ಇದರಿಂದ, ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಆಯಾ ತಾಲೂಕಿನ ತಹಶೀಲ್ದಾರರು ಆದೇಶ ಮಾಡಿದ್ದಾರೆ.
ಕೆಲ ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು ನದಿ, ತೊರೆಗಳು ಮೈದುಂಬಿ ಹರಿಯುತ್ತಿವೆ. ಮಲೆನಾಡು ಭಾಗದ ತಾಲೂಕುಗಳಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಕ್ಕಳು ಶಾಲೆಗೆ ಹೋಗುವುದು ಕಠಿಣವಾಗಿದೆ. ಅಲ್ಲಲ್ಲಿ ಮನೆಗಳು ಕುಸಿದ, ರಸ್ತೆ ಹಾಗೂ ಭೂಕುಸಿತ ಘಟನೆಗಳು ನಡೆದಿವೆ.
ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ: ಮಳೆ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನ ಕೆಲ ತಾಲೂಕುಗಳ ಶಾಲೆಗಳಿಗೆ ಶನಿವಾರ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
ಎಲ್ಲೆಲ್ಲಿ ರಜೆ?: ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
Laxmi News 24×7