ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿದರು.
ನಾಳೆ ಶಿಕ್ಷೆ ಪ್ರಕಟ: ಪ್ರಕರಣದಲ್ಲಿ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಪರಿಗಣಿಸಿದ್ದು, ನಾಳೆ(ಶನಿವಾರ) ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದರು.
ಪ್ರಕರಣದ ವಿವರ: ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು. ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪಪಟ್ಟಿಯನ್ನು ಕಳೆದ ವರ್ಷಾಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್ ಹೌಸ್ ಮತ್ತು ಆ ನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ತಂದೆ ಹೆಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ಮರಳುತ್ತಿದ್ದಂತೆ 2024ರ ಮೇ 21ರಂದು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದರು.
ಇಂದು ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.
14 ತಿಂಗಳಿಂದ ಜೈಲುವಾಸ: ಕಳೆದ 14 ತಿಂಗಳಿನಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿತ್ತು. ಪ್ರಕರಣದ ತನಿಖೆ ನಡೆಸಿದ ತಂಡ 113 ಸಾಕ್ಷಿಗಳನ್ನೊಳಗೊಂಡ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.
Laxmi News 24×7