ಶಿರಸಿ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃದ್ದಿ: ಸಚಿವ ದಿನೇಶ್ ಗುಂಡೂರಾವ್
ಕಾರವಾರ: ಕಾರವಾರದ ಜಿಲ್ಲಾ ಆಸ್ಪತ್ರೆಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಲೀನ ಮಾಡಿರುವುದರಿಂದ, ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃಧ್ದಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಅಭಿವೃಧ್ದಿ ಮಾಡುವ ಕುರಿತಂತೆ ಆಸ್ಪತ್ರೆಗೆ ಅಗತ್ಯವಿರುವ ಸಿಟಿ ಸ್ಕ್ಯಾನ್, ಎಂ.ಅರ್.ಐ ಯಂತ್ರೋಪಕರಣಗಳು ಸಿಬ್ಬಂದಿ ಹಾಗೂ ಕಿಮೋಥೇರಪಿ ಡೇ ಕೇರ್ ಸೆಂಟರ್ ಸ್ಥಾಪನೆಯ ಕುರಿತಂತೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ ಸಚಿವರು ಜಿಲ್ಲೆಯಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು, ನಿರ್ಜಿವ ಜನನ ದರವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 2 ಮಂದಿ ಪ್ರಸೂತಿ ವೈದ್ಯರು, 2 ಮಂದಿ ಅರವಳಿಕೆ ತಜ್ಞರು ಮತ್ತು 2 ಮಂದಿ ಮಕ್ಕಳ ತಜ್ಞರ ಸೇವೆಯನ್ನು ದೊರೆಯುವಂತೆ ಮಾಡುವ ಮೂಲಕ 24*7 ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಿ, ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಕಡಿಮೆ ಹೆರಿಗೆ ಪ್ರಮಾಣವಿದ್ದಲ್ಲಿ ಅಲ್ಲಿ ಕಾರ್ಯ ನಿರ್ವಹಿಸುವ ತಜ್ಞ ವೈದ್ಯರನ್ನು ತಾಲೂಕು ಆಸ್ಪತ್ರೆಗೆ ನಿಯೋಜಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದರ ಜೊತೆಗೆ ತುರ್ತು ಸಂದರ್ಭದಲ್ಲಿ ವೈದ್ಯರ ಲಭ್ಯತೆ ಸಿಗುವದರಿಂದ ಮುಂದೆಯಾಗಬಹುದಾದ ಅನಾಹುತವನ್ನು ತಡೆಗಟ್ಟಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 3 ಸಮುದಾಯ ಕೇಂದ್ರಗಳ ಜೊತೆ ಹೊಸದಾಗಿ ನಿರ್ಮಾಣವಾಗುತ್ತಿರುವ 5 ಸಮುದಾಯಗಳಿಗೆ ಅಗತ್ಯ ಸಿಬ್ಬಂದಿಗಳ ನಿಯೋಜನೆ ಹಾಗೂ ಯಂತ್ರೋಪಕರಣ ಪೂರೈಕೆಗೆ ಆರ್ಥಿಕ ಇಲಾಖೆ ಸಮ್ಮತಿ ನೀಡಲಾಗಿದೆ ಎಂದರು.
ಗೃಹ ಆರೋಗ್ಯದ ಯೋಜನೆಯನ್ನು ಜಿಲ್ಲೆಯಲ್ಲಿ ತಕ್ಷಣ ಅನುಷ್ಠಾನ ಮಾಡುವಂತೆ ಸೂಚಿಸಿದ ಸಚಿವರು, ವೈದ್ಯರು ಮತ್ತು ಸಿಬ್ಬಂದಿಗಳು ಜಿಲ್ಲೆಯ ಪ್ರತೀ ಮನೆಗಳಿಗೆ ತೆರಳಿ ಬಿಪಿ, ಶುಗರ್, ಮುಂತಾದ ತಪಾಸಣೆ ಮಾಡಬೇಕು, ಈ ಕಾಯಿಲೆ ಕಂಡು ಬಂದಲ್ಲಿ ನಿರಂತರವಾಗಿ ಉಚಿತವಾಗಿ ಔಷಧ ಸರಬರಾಜು ಮಾಡಬೇಕು. ತಾಯಿ ಮತ್ತು ಮಗು ಆರೈಕೆಗೆ ಪ್ರಥಮ ಆದ್ಯತೆ ನೀಡುವಂತೆ ತಿಳಿಸಿದ ಅವರು, ನಿಯಮಿತವಾಗಿ ಬಾಣಂತಿಯರು ಮತ್ತು ಗರ್ಭಿಣಿಯರನ್ನು ವೈದ್ಯರು ಮತ್ತು ಆಶಾ ಕಾರ್ಯಕರ್ತರು ಮೇಲ್ವಿಚಾರಣೆ ಮಾಡಬೇಕು ಎಂದರು.
ರಾಜ್ಯದಲ್ಲಿ ಶಾಶ್ವತ ದೃಷ್ಟಿ ಗ್ಯಾರಂಟಿಯಡಿ 398 ಆಶಾ ಕಿರಣ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯಲ್ಲಿ 14 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಈ ಕೇಂದ್ರಗಳಲ್ಲಿ ಸಾರ್ವಜನಿಕರು ಉಚಿತವಾಗಿ ತಮ್ಮ ದೃಷ್ಟಿ ದೋಷದ ತಪಾಸಣೆಯ ಜೊತೆ ಕನ್ನಡಕ ಮತ್ತು ಶಸ್ತç ಚಿಕಿತ್ಸೆಯನ್ನು ಮಾಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೇ 52 ಗ್ರಾಮ ಪಂಚಾಯತ್ಗಳು ಕ್ಷಯ ಮುಕ್ತ ಗ್ರಾಮಗಳಾಗಿದ್ದು, ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮ ವಹಿಸಬೇಕು ಎಂದ ಅವರು, ಡಾ. ಪುನೀತ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಎಲ್ಲ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದರು.
ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ ಯನ್ನು ರಾಜ್ಯದ್ಯಾಂತ ಕಡ್ಡಾಯಗೊಳಿಸಲಾಗಿದ್ದು, ವೈದ್ಯರು ಮತ್ತು ಸಿಬ್ಬಂದಿಗಳು ತಮ್ಮ ಮೊಬೈಲ್ ಮೂಲಕವೇ ಹಾಜರಾತಿಯನ್ನು ನೀಡಬಹುದಾಗಿದೆ, ಇದರಿಂದ ಹಾಜರಾತಿಯ ಸಮಯ ಲೊಕೇಷನ್, ಎಲ್ಲವೂ ತಿಳಿಯುವದರಿಂದ ವೈದ್ಯರು ಮತ್ತು ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಇಲ್ಲ ಎಂಬ ದೂರುಗಳ ಬಗ್ಗೆ ನಿಖರ ಮಾಹಿತಿ ದೊರೆಯಲಿದ್ದು, ಜಿಲ್ಲೆಯ ಶೇ.100 ರಷ್ಟು ಸಿಬ್ಬಂದಿಗಳ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ದಿಲೀಷ್ ಶಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ವಿಭಾಗೀಯ ನಿರ್ದೇಶಕಿ ಡಾ.ಪುಷ್ಪಾ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಡಾ.ನೀರಜ್ ಮತ್ತಿತರರು ಇದ್ದರು.