ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಆ. 6ರಂದು ನಡೆದಿದ್ದ ಅಹಿತಕರ ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22), ಶಶಿಧರ್(30), ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಕಲ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತ ಆರೋಪಿಗಳು.
ಧರ್ಮಸ್ಥಳದ ಪಾಂಗಳದಲ್ಲಿ ಆಗಸ್ಟ್ 6 ರಂದು ನಾಲ್ವರು ಯೂಟ್ಯೂಬರ್ಗಳ ಮೇಲೆ ತಂಡವೊಂದು ಹಲ್ಲೆ ನಡೆಸಿತ್ತು. ಈ ವೇಳೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡರು. ಆದ್ರೆ ಈ ವೇಳೆ ಕೆಲವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.
ಅದರಂತೆ ಸೋಮನಾಥ ಸಪಲ್ಯ ಎಂಬಾತನನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು. ನಂತರ ತನಿಖೆ ಮುಂದುವರಿಸಿದ ಪೊಲೀಸರು ಆ.9ರಂದು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರಾಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದೆ ಎಂದು ದ.ಕ ಜಿಲ್ಲಾ ಎಸ್ಪಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
Laxmi News 24×7