ಗಂಗಾವತಿ (ಕೊಪ್ಪಳ): ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯೂಸೆಕ್ಗೂ ಅಧಿಕ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ, ಯಾವುದೇ ಕ್ಷಣದಲ್ಲಿ ತಾಲೂಕಿನ ಕಂಪ್ಲಿ ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಸಾರ್ವಜನಿಕ ಹಾಗೂ ರಸ್ತೆ ಸಂಚಾರದ ಹಿತದೃಷ್ಟಿಯಿಂದ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಶ್ವನಾಥ್ ಅವರು ಈಗಾಗಲೇ ಗಂಗಾವತಿ ಗ್ರಾಮೀಣ ಪೊಲೀಸರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಸೇತುವೆಯ ಸಂಚಾರ ಬಂದ್ ಆದರೆ ಕೊಪ್ಪಳ – ಬಳ್ಳಾರಿ ಜಿಲ್ಲೆಯ ಮಧ್ಯೆ ಇರುವ ಅಂತರ್ಜಿಲ್ಲಾ ನೇರ ಸಂಪರ್ಕ ಸ್ಥಗಿತವಾಗಲಿದೆ.
ಈಗಾಗಲೇ, ಹೆಚ್ಚಿನ ನೀರು ಹರಿಸಿದ್ದರಿಂದ ಸೇತುವೆಯ ಕೆಲವೇ ಅಡಿಗಳ ಕೆಳಭಾಗದಲ್ಲಿ ತುಂಗಭದ್ರಾ ನದಿಯ ನೀರು ಹರಿಯುತ್ತಿದೆ. ಇನ್ನೊಂದು 10-15 ಸಾವಿರ ಕ್ಯೂಸೆಕ್ ನೀರು ಹರಿಸಿದರೆ ಸೇತುವೆ ಸಂಪೂರ್ಣ ಮುಳುಗಡೆಯಾಗಲಿದೆ. ನದಿಯಲ್ಲಿ ಪ್ರವಾಹದ ಸನ್ನಿವೇಶ ನಿರ್ಮಾಣವಾಗಿದೆ. ಇದರಿಂದ ಸೇತುವೆ ಮೇಲಿನ ವಾಹನ ಮತ್ತು ಜನ ಸಂಚಾರ ಸೂಕ್ತವಲ್ಲ. ಸಂಚಾರ ನಿಷೇಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಮತ್ತು ಪೊಲೀಸ್ ಇಲಾಖೆಗೆ ಪ್ರತಿಗಳನ್ನು ರವಾನಿಸಲಾಗಿದೆ.

ಸುತ್ತು ಬಳಸಿ ಗಂಗಾವತಿಗೆ ಪ್ರಯಾಣ: ಸೇತುವೆಯ ಸಂಚಾರ ಸ್ಥಗಿತವಾದರೆ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಮಧ್ಯೆ ಇದ್ದ ಅಂತರ್ಜಿಲ್ಲಾ ನೇರ ಸಂಪರ್ಕ ಕಡಿತಗೊಳ್ಳಲಿದೆ. ಹೀಗಾಗಿ, ಗಂಗಾವತಿ – ಕಂಪ್ಲಿ ಮಧ್ಯದ ಸಂಚಾರ ಅಥವಾ ಬಳ್ಳಾರಿ – ಕೊಪ್ಪಳ ಜಿಲ್ಲೆಯ ಸಂಚಾರಕ್ಕೆ ಸುತ್ತು ಬಳಸಿ ಬರಬೇಕಾದ ಅನಿವಾರ್ಯತೆ ಎದುರಾಗಲಿದೆ. ಭಾನುವಾರ ಸಂಜೆವರೆಗೂ ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ನದಿಯ ಮೂಲಕ ಹೊರಕ್ಕೆ ಬಿಡಲಾಗಿತ್ತು. ಇದರ ಪ್ರಮಾಣವನ್ನು ಸೋಮವಾರ ಬೆಳಗಿನಿಂದ 1.15 ಲಕ್ಷ ಕ್ಯೂಸೆಕ್ಗೆ ಹೆಚ್ಚಿಸುವ ಸಾಧ್ಯತೆಯ ಬಗ್ಗೆ ಜಲಾಶಯದ ಅಧಿಕಾರಿಗಳು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.

ಕಂಪ್ಲಿ – ಗಂಗಾವತಿ ಜನರ ಪರದಾಟ: ಕಂಪ್ಲಿ ಮತ್ತು ಗಂಗಾವತಿ ಆಡಳಿತಾತ್ಮಕವಾಗಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗೆ ಸೇರಿವೆಯಾದರೂ, ಭೌಗೋಳಿಕವಾಗಿ ಎರಡು ತಾಲೂಕಿನ ಗಡಿಗಳು ಕೇವಲ ಒಂದು ಕಿಲೋ ಮೀಟರ್ ಅಂತರದಲ್ಲಿವೆ. ಚಿಕ್ಕಜಂತಕಲ್ – ಕಂಪ್ಲಿ ಬಳಿ ಇರುವ ಸುಮಾರು ಒಂದು ಕಿಲೋ ಮೀಟರ್ ಉದ್ದದ ಸೇತುವೆಯೇ ಈ ಎರಡೂ ತಾಲೂಕುಗಳನ್ನು ವಿಭಜಿಸಿದೆ.
Laxmi News 24×7