ಬೆಂಗಳೂರು (ಆಗಸ್ಟ್.19): ಕಳೆದೊಂದು ವಾರದಿಂದ ಕರ್ನಾಟಕ ಮಳೆ (Karnataka Rains) ಅಬ್ಬರ ಜೋರಾಗಿದೆ. ಇದರಿಂದ ಕರೆ-ಕಟ್ಟೆಗಳು, ನದಿ, ಹಳ್ಳ-ಕೊಳ್ಳಗಳು ತುಂಬಿಹರಿಯುತ್ತಿದ್ದು, ಹಲವೆಡೆ ದೊಡ್ಡ ಅವಾಂತರಗಳೇ ಆಗಿವೆ. ಜಿಟಿ-ಜಿಟಿ ಮಳೆಯಿಂದಾಗಿ ಹೈರಾಣಾಗಿರುವ ಜನರಿಗೆ ಇನ್ನಷ್ಟು ದಿನ ಮಳೆ ಕಾಟ ಇರಲಿದೆ. ಹೌದು…ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನಾಳೆ ಅಂದರೆ ಆಗಸ್ಟ್ 20ರಂದು ಶಾಲಾ-ಕಾಲೇಜುಗಳಿಗೆ ರಜೆ (School And College Holiday) ನೀಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದೇಶದ ಹಲವು ಭಾಗದಲ್ಲಿ ಭಾರಿಯಿಂದ ಅತಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷವಾಗಿ ದಕ್ಷಿಣ, ಪೂರ್ವ ಮತ್ತು ಪಶ್ಚಿಮ, ಕೇಂದ್ರ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಬೆಳಗಾವಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಹೀಗಾಗಿ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು ಆ.19ರಮದು ರಜೆ ಘೋಷಣೆ ಮಾಡಲಾಗಿತ್ತು. ನಾಳೆಯೂ ಸಹ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ (ಬುಧವಾರ) ಕೂಡ ಬೆಳಗಾವಿ ಜಿಲ್ಲೆಯ ಅಂಗನವಾಡಿ, ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
Laxmi News 24×7