ಬೆಂಗಳೂರು : ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣದಲ್ಲಿ ಕೆಲ ದಾಖಲೆ ಒದಗಿಸುವಂತೆ ಇ.ಡಿ (ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ಪ್ರಶ್ನಿಸಿ ಆರ್.ಆರ್ ನಗರದ ಹನುಮಂತರಾಯಪ್ಪ ಪುತ್ರ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಆದೇಶವನ್ನು ಮುಂದಿನ ಸೋಮವಾರ ಪ್ರಕಟಿಸುವುದಾಗಿ ಹೇಳಿದೆ.
ತನಗೆ ಜಾರಿ ಮಾಡಿರುವ ಸಮನ್ಸ್ ಪ್ರಶ್ನಿಸಿ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮುಗ್ದಂ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೇ, ಅರ್ಜಿ ಸಂಬಂಧ ನ್ಯಾಯಾಲಯ ಆದೇಶ ಪ್ರಕಟಿಸುವವರೆಗೂ ಅನಿಲ್ ಗೌಡ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಇ.ಡಿಗೆ ನ್ಯಾಯಪೀಠ ಸೂಚಿಸಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಅರ್ಜಿದಾರರು ವೃತ್ತಿಯಲ್ಲಿ ವಕೀಲರಾಗಿದ್ದು, ಈ ನೆಲೆಯಲ್ಲಿ ಕೆ.ಸಿ.ವೀರೇಂದ್ರರಿಗೆ ಸಲಹೆ ನೀಡಿದ್ದಾರೆ ಅಷ್ಟೇ. ಇದನ್ನು ಪರಿಗಣಿಸದೇ ಅವರನ್ನು ವಿನಾಕಾರಣ ಇ.ಡಿ. ಅಧಿಕಾರಿಗಳು ವಿಚಾರಣೆಗೊಳಪಡಿಸುವುದಕ್ಕೆ ಮುಂದಾಗಬಾರದು. ಇ.ಡಿ.ಯ ವ್ಯಾಪ್ತಿ ಸುಪ್ರೀಂ ಕೋರ್ಟ್ ಪರಿಶೀಲನೆಯಲ್ಲಿದೆ. ಈ ಎಲ್ಲ ಅಂಶದ ಮೇರೆಗೆ ಇ.ಡಿ ಜಾರಿಗೊಳಿಸಿದ ಸಮನ್ಸ್ ತಡೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಇಡಿ ಪರ ಹಾಜರಿದ್ದ ವಕೀಲರು, ಅರ್ಜಿದಾರರು ವಕೀಲರಾಗಿರುವ ಕಾರಣಕ್ಕೆ ಇ.ಡಿ. ಸಮನ್ಸ್ ಜಾರಿಗೊಳಿಸಿಲ್ಲ. ಬದಲಿಗೆ ಕೆ.ಸಿ. ವೀರೇಂದ್ರ ಅವರ ಕಂಪನಿ ಸೇರಿದಂತೆ ಹಲವು ವಾಣಿಜ್ಯ ಕಂಪನಿಗಳಲ್ಲಿ ಪಾಲುದಾರಾಗಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅವರ ಮೇಲೆ ಅಕ್ರಮವಾಗಿ ಹಣ ಹೂಡಿಕೆ ಮಾಡಿರುವ ಗಂಭೀರ ಆರೋಪವಿದೆ. ಇದರ ಅನ್ವಯ ಸಮನ್ಸ್ ಜಾರಿಗೊಳಿಸಿಲಾಗಿದೆ ಎಂದು ಪೀಠದ ಮುಂದೆ ವಿವರಿಸಿದರು.
ಅಲ್ಲದೆ, ಯಾವುದೇ ವ್ಯಕ್ತಿಯ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಾಗ ಸಮನ್ಸ್ ಜಾರಿಗೊಳಿಸುವುದು ಕಾನೂನುಬದ್ಧ ಪ್ರಕ್ರೀಯೆ. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರುವುದು ಒಪ್ಪುವಂತದಲ್ಲ. ಇಲ್ಲಿ ಅರ್ಜಿದಾರರು ತನಿಖಾಧಿಕಾರಿಗಳ ದಾರಿ ತಪ್ಪಿಸಲು ಯತ್ನಿಸುತ್ತಿದ್ದಾರೆ. ಈ ಎಲ್ಲ ಅಂಶವನ್ನು ಪರಿಗಣಿಸಿ ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದರು.
Laxmi News 24×7