ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ ನಾಲ್ಕೂವರೆ ತಿಂಗಳಿನಿಂದ ಸ್ಥಗಿತವಾಗಿದ್ದ ಇಲ್ಲಿನ ಉಪನಗರ ಕೇಂದ್ರ(ಹಳೇ) ಬಸ್ ನಿಲ್ದಾಣ ಇಂದಿನಿಂದ ಪುನಾರಂಭವಾಗಿದೆ. ಬುಧವಾರ (ಸೆ.3) ಬೆಳಗ್ಗೆಯಿಂದಲೇ ಬಸ್ ಸಂಚಾರ ಆರಂಭವಾಗಿದೆ. ಚನ್ನಮ್ಮ ವೃತ್ತದಿಂದ ಬಸವ ವನದವರೆಗೆ ಬಂದ್ ಮಾಡಲಾಗಿದ್ದ ರಸ್ತೆ ಸಹ ಮುಕ್ತವಾಗಿದೆ.
ಮೇಲ್ಸೇತುವೆಯ ತ್ವರಿತ ಕಾಮಗಾರಿಗಾಗಿ ಏ.20ರಿಂದ ಬಸ್ ನಿಲ್ದಾಣ ಸೇರಿ ಅದರ ಎದುರಿನ ರಸ್ತೆ ಮತ್ತು ಚನ್ನಮ್ಮ ಸರ್ಕಲ್ನಿಂದ ಹಳೇ ಕೋರ್ಟ್ವರೆಗಿನ ರಸ್ತೆ ಬಂದ್ ಮಾಡಲಾಗಿತ್ತು.
ಈ ಭಾಗದಲ್ಲಿ ಕಾಮಗಾರಿ ಮುಕ್ತಾಯವಾದ ಹಿನ್ನೆಲೆಯಲ್ಲಿ, ಬಸ್ ನಿಲ್ದಾಣ ಹಾಗೂ ಭಾಗಶಃ ರಸ್ತೆ ಮುಕ್ತಗೊಳಿಸಲಾಗಿದೆ.ಈ ಕುರಿತಂತೆ ವಾಯವ್ಯ ಸಾರಿಗೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರು ಪ್ರತಿಕ್ರಿಯಿಸಿ, “ಫ್ಲೈ ಓವರ್ ಕಾಮಗಾರಿಯಿಂದ ಜಿಲ್ಲಾಧಿಕಾರಿ ಸೂಚನೆಯಂತೆ ಕೆಲ ತಿಂಗಳುಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಆದ್ರೆ ಈಗ ಬಸ್ ನಿಲ್ದಾಣದ ಸುತ್ತಮುತ್ತಲಿನ ಕಾಮಗಾರಿ ಮುಗಿಸಿದಿದೆ. ಹೀಗಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಬಸ್ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂಬುದನ್ನು ಪರಿಗಣಿಸಿ ಇಂದು ಬೆಳಗ್ಗೆಯಿಂದ ಬಸ್ ಸಂಚಾರ ಆರಂಭವಾಗಿದೆ” ಎಂದು ತಿಳಿಸಿದರು.
Laxmi News 24×7