ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್, ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಬಿ ವರದಿ ಸಲ್ಲಿಸಲಾಗಿದೆ. ಆದ್ದರಿಂದ ಅರ್ಜಿಯನ್ನು ಹಿಂಪಡೆಯಬೇಕು ಎಂದು ಕೋರಿದರು.
ಈ ವೇಳೆ ಸರ್ಕಾರದ ಪರ ವಕೀಲರು, ತನಿಖಾಧಿಕಾರಿಗಳು ಬಿ ವರದಿ ಸಲ್ಲಿಸಿದ್ದಾರೆ. ಆದರೆ, ನ್ಯಾಯಾಲಯ ಆ ವರದಿಯನ್ನು ಈವರೆಗೂ ಪರಿಗಣಿಸಿಲ್ಲ. ಇದೀಗ ಯಾವುದೇ ಆದೇಶ ನೀಡಬಾರದು ಎಂದು ಪೀಠಕ್ಕೆ ತಿಳಿಸಿದರು.
ವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಸಂಬಂಧ ಮುನಿರತ್ನ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ : ಮಹಿಳೆಯನ್ನು ವಿವಸ್ತ್ರಗೊಳಿಸಿ, ಸಹಚರರಿಂದ ಆತ್ಯಾಚಾರ ಮಾಡಿಸಿದ ಮತ್ತು ವೈರಸ್ ತಗುಲುವ ಚುಚ್ಚುಮದ್ದು ನೀಡಲಾಗಿತ್ತು ಎಂದು ಆರೋಪಿಸಿ ಮಹಿಳೆಯೊಬ್ಬರು ಬಿಜೆಪಿ ಶಾಸಕ ಮುನಿರತ್ನ ಮತ್ತಿತರರ ವಿರುದ್ಧ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.