ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಬೆಂಗಳೂರು: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಸದಸ್ಯರು, ಜಿಲ್ಲಾ ಆಯೋಗಗಳ ಸದಸ್ಯರು, ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂಕೋರ್ಟ್ ಆದೇಶಕ್ಕೆ ರಾಜ್ಯ ಸರ್ಕಾರ ಬದ್ಧರಾಗಿರಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ಇತ್ಯರ್ಥಪಡಿಸಿದೆ.
ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿರುವ ಸದಸ್ಯರು, ಜಿಲ್ಲಾ ಆಯೋಗಗಳಲ್ಲಿನ ಅಧ್ಯಕ್ಷರು ಮತ್ತು ಸದಸ್ಯರು ಸೇರಿ ಖಾಲಿ ಇರುವ 61 ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶ ಕೋರಿ ವಕೀಲೆ ಸುಧಾ ಕಾಟ್ವ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿ, ಅರ್ಜಿ ಇತ್ಯರ್ಥಪಡಿಸಿದೆ.
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರ ನಿಯಮಗಳನ್ನು ರೂಪಿಸಬೇಕು. ಅದಾದ ನಾಲ್ಕು ತಿಂಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಯಾ ರಾಜ್ಯಗಳು ಕ್ರಮಗಳನ್ನು ಕೈಗೊಳ್ಳಬೇಕು ಎಂದು 2025ರ ಮೇ 21ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂಕೋರ್ಟ್ನ ಈ ಆದೇಶಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧರಾಗಿರಬೇಕಾಗುತ್ತದೆ. ಹಾಗಾಗಿ, ಈ ಅರ್ಜಿಯಲ್ಲಿ ಪ್ರತ್ಯೇಕ ಆದೇಶ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ರಾಜ್ಯ ಗ್ರಾಹಕರ ಆಯೋಗದಲ್ಲಿ 8 ಮಂದಿ ಸದಸ್ಯರ ಹುದ್ದೆಗಳು, ವಿವಿಧ ಜಿಲ್ಲಾ ಆಯೋಗಗಳ 18 ಮಂದಿ ಅಧ್ಯಕ್ಷರು, 35 ಮಂದಿ ಸದಸ್ಯರ ಹುದ್ದೆಗಳು ಖಾಲಿ ಇವೆ. ಅರ್ಜಿದಾರರ ಮನವಿ ಬಳಿಕ 9 ತಿಂಗಳ ಹಿಂದೆ ಆಯೋಗದ ಅಧ್ಯಕ್ಷರ ನೇಮಕವಾಗಿದೆ. ಉಳಿದಂತೆ 61 ಹುದ್ದೆಗಳು ಖಾಲಿ ಉಳಿದಿವೆ. ಆಯೋಗದಲ್ಲಿ ವ್ಯಾಜ್ಯಗಳ ವಿಚಾರಣೆ ನಡೆಯುತ್ತಿಲ್ಲ. ಸುಮಾರು 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದೆ. ಕೇಂದ್ರ ಸರ್ಕಾರ ನಿಯಮಗಳನ್ನು ರೂಪಿಸುವವರೆಗೆ ಈಗಿರುವ ನಿಯಮಗಳಡಿ ಅಧ್ಯಕ್ಷ ಹಾಗೂ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶವಿದ್ದು, ಅದರಂತೆ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.