ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ 1995ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಹಾಗೂ ಮಾಜಿ ಶಾಸಕ ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರು ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.
ಅರ್ಜಿಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಮತ್ತು ಭಾರತ ಜನಗಣತಿ ಆಯೋಗ ಹಾಗೂ ರಿಜಿಸ್ಟ್ರಾರ್ ಜನರಲ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಅರ್ಜಿಯಲ್ಲೇನಿದೆ?: ಕೇಂದ್ರ ಸರ್ಕಾರ 2018ರಲ್ಲಿ ಸಂವಿಧಾನದ 102ನೇ ತಿದ್ದುಪಡಿ ಮಾಡಿದ್ದು, ಪರಿಚ್ಛೇದ 342ಕ್ಕೆ 342(ಎ)ನ್ನು ಸೇರ್ಪಡೆ ಮಾಡಿದೆ. ಅದರಂತೆ ಕೇಂದ್ರದ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳೆಂದು ಗುರುತಿಸಿಕೊಂಡಿರುವ ಸಮುದಾಯಗಳ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಾನಮಾನಗಳ ಕುರಿತಂತೆ ಸಮೀಕ್ಷೆ ನಡೆಸುವುದಕ್ಕೆ ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ.
ರಾಷ್ಟ್ರಪತಿಗಳಿಂದ ನೇಮಕವಾದ ಆಯೋಗ ಮಾತ್ರ ಹಿಂದುಳಿದ ವರ್ಗಗಳ ಸ್ಥಾನಮಾನ ಪರಿಶೀಲಿಸುವುದು ಮತ್ತು ಆ ಕುರಿತ ಅರ್ಜಿಗಳ ವಿಚಾರಣೆ ನಡೆಸುವುದಕ್ಕೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದೆ. ಆದರೆ, ಇತರ ಯಾವುದೇ ಆಯೋಗಕ್ಕೂ ಈ ಅಧಿಕಾರ ಇಲ್ಲ. ಆದ್ದರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಕೇಂದ್ರ ಸರ್ಕಾರದ ಅಧಿಕಾರವನ್ನು ಕಸಿದುಕೊಂಡಂತಾಗಲಿದೆ. ಹೀಗಾಗಿ ಹಿಂದುಳಿದ ವರ್ಗಗಳ ಕಾಯಿದೆ ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಅಲ್ಲದೇ, ಸಂವಿಧಾನದ ಪರಿಚ್ಛೇದ 340ರ ಅಡಿ ತಿಳಿಸಿರುವಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಸ್ಥಿತಿಗತಿಗಳ ಸಮೀಕ್ಷೆ ನಡೆಸುವುದಕ್ಕೆ ರಾಷ್ಟ್ರಪತಿಗಳಿಂದ ನೇಮಕಗೊಂಡ ವ್ಯಕ್ತಿಗಳ ಆಯೋಗಕ್ಕೆ ಮಾತ್ರ ಅಧಿಕಾರವಿದೆ. ಈ ರೀತಿಯ ಅಧಿಕಾರ ರಾಷ್ಟ್ರಪತಿಗಳಿಗೆ ಮಾತ್ರ ನೀಡಲಾಗಿದೆ. ಜೊತೆಗೆ, ಸಮೀಕ್ಷಾ ವರದಿ ಆದರಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂವಿಧಾನದ ಪರಿಚ್ಛೇದ 340(1)ರ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವುದಕ್ಕೆ ಅವಕಾಶವಿದೆ.
ಆದರೆ, ರಾಜ್ಯ ಸರ್ಕಾರ ಸಂವಿಧಾನ ಈ ಪರಿಚ್ಚೇದಗಳನ್ನು ಉಲ್ಲಂಘಿಸಿ ತನ್ನ ಅಧಿಕಾರ ವ್ಯಾಪ್ತಿ ಮೀರಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು, ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಸಂವಿಧಾನ ಬಾಹಿರವಾಗಿರುವ ರಾಜ್ಯ ಹಿಂದುಳಿದ ವರ್ಗಗಳ ಕಾಯಿದೆ 1995 ಮತ್ತು ಅದಕ್ಕೆ ತಿದ್ದುಪಡಿ ಮಾಡಿರುವ ಸೆಕ್ಷನ್ 9(1)ನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು.
Laxmi News 24×7