ಬೆಂಗಳೂರು: ಈ ವರ್ಷ ಮೈಸೂರು ದಸರಾ ಉತ್ಸವ ಉದ್ಘಾಟಿಸಲು ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಹಿಷ್ಣುತೆ ಹಾಗೂ ಸಹಬಾಳ್ವೆಯ ಮಹತ್ವದ ಪರವಾಗಿ ಮಾತನಾಡಿ, ವೈವಿಧ್ಯತೆಯಲ್ಲಿ ಏಕತೆಗಾಗಿ ಶ್ರಮಿಸುವಂತೆ ಕರೆ ನೀಡಿದ್ದಾರೆ.
2024ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಮತ್ತು 2017 ರಿಂದ 2023ರ ಸಾಲಿನ ಪರಿಸರ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ಕನ್ನಡ ಲೇಖಕಿ ಬಾನು ಮುಷ್ತಾಕ್ ಬೂಕರ್ ಪ್ರಶಸ್ತಿ ವಿಜೇತರು, ದಸರಾ ಉದ್ಘಾಟನೆಗೆ ಅವರ ಆಯ್ಕೆಯನ್ನು ವಿರೋಧಿಸಿದವರು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು. ಎರಡೂ ಕಡೆಯಲ್ಲೂ ಅವರಿಗೆ ಸೋಲಾಗಿದೆ” ಎಂದು ಹೇಳಿದರು.
ದಸರಾ ಉದ್ಘಾಟನೆ ಧಾರ್ಮಿಕ ವಿಷಯವಲ್ಲ, ಸಾಂಸ್ಕೃತಿಕ ವಿಷಯ. ಇದಲ್ಲದೇ ದಸರಾ ನಾಡಹಬ್ಬ. ವಿವಿಧ ನಂಬಿಕೆಗಳ ಹಾಗೂ ಜಾತಿಗಳ ನೆಲೆಬೀಡು ಭಾರತ. ನಮಗೆ ಇತರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಇರಬೇಕು. ನಾವು ಒಟ್ಟಿಗೆ ಬದುಕಿ ಸಮೃದ್ಧಿ ಹೊಂದಬೇಕು. ಜೊತೆಗೆ ವೈವಿಧ್ಯತೆಯಲ್ಲಿ ಏಕತೆಗಾಗಿ ಶ್ರಮಿಸಬೇಕು” ಎಂದು ಕರೆ ನೀಡಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿದ್ದರಾಮಯ್ಯ, ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದು ಬರೆದಿದ್ದಾರೆ.
ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Laxmi News 24×7