ಬೆಂಗಳೂರು: ವೈದ್ಯಕೀಯ ಸ್ನಾತಕ ಅಥವಾ ಸ್ನಾತಕೋತ್ತರ ಪದವಿಯ ಪ್ರವೇಶಕ್ಕೆ ನಡೆಯುವ ನೀಟ್ ಪರೀಕ್ಷೆಗೆ ಸಲ್ಲಿಸುವ ಅರ್ಜಿಗಳಲ್ಲಿ ಜಾತಿ ಸೇರಿದಂತೆ ಇತರೆ ಗೊಂದಲಗಳ ತಿದ್ದುಪಡಿಗೆ ಅವಕಾಶ ಕಲ್ಪಿಸಿದ್ದ ಸಂದರ್ಭದಲ್ಲಿ ಸರಿಪಡಿಸಿಕೊಳ್ಳದೆ, ಫಲಿತಾಂಶದ ಬಳಿಕ ಮೀಸಲು ವರ್ಗ ಬದಲಾಯಿಸಲು ಕೋರುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ನೇಕಾರ ಸಮುದಾಯಕ್ಕೆ ಸೇರಿದ್ದು ಅರ್ಜಿಯಲ್ಲಿ ಸಾಮಾನ್ಯ ವರ್ಗ ಎಂಬುದಾಗಿ ನಮೂದಿಸಲಾಗಿದೆ. ತನ್ನನ್ನು ಹಿಂದುಳಿದ ವರ್ಗಗಳ ಪಟ್ಟಿಯಡಿ ಪರಿಗಣಿಸಬೇಕು ಎಂದು ಕೋರಿ ವೈದ್ಯಕೀಯ ಸ್ನಾತಕೋತ್ತರ ಪದವಿಯ ಆಕಾಂಕ್ಷಿ ಡಾ.ಸಿ.ಎನ್. ಅನುಷಾ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ವೆಂಕಟೇಶ್ ಟಿ.ನಾಯ್ಕ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿಯಲ್ಲಿ ಯಾವುದೇ ಹುರಳಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಅಲ್ಲದೆ, ಅರ್ಜಿದಾರರ ಪರ ವಕೀಲರು ಈ ಹಿಂದೆ ಹೈಕೋರ್ಟ್ನ ಮತ್ತೊಂದು ಪೀಠ ನೀಡಿರುವ ಎರಡು ಪ್ರಕರಣಗಳನ್ನು ಉಲ್ಲೇಖಿಸಿ, ಅರ್ಜಿದಾರರ ಮನವಿಯನ್ನು ಪರಿಗಣಿಸಬೇಕು ಎಂದು ಕೋರಿದ್ದರು. ಆದರೆ ಆ ಎರಡೂ ಪ್ರಕರಣಗಳಲ್ಲಿ ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನ ಹೈಕೋರ್ಟ್ ಮೆಟ್ಟಿಲೇರಿದ್ದರು.
Laxmi News 24×7