ಬಂಟ್ವಾಳ(ದಕ್ಷಿಣ ಕನ್ನಡ): ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಬಜರಂಗದಳ ಜಿಲ್ಲಾ ಮುಖಂಡ ಭರತ್ ಕುಮ್ಡೇಲು ಹಾಗೂ ಬಂಧಿತ 13 ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ(KCOCA Act) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.
ಮೇ 27ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಕೊಲೆಯಾಗಿತ್ತು. ಈ ಪ್ರಕರಣದ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಈ ವೇಳೆ 13 ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿಗಳ ವಿವರ: 1) ದೀಪಕ್ 2) ಚಿಂತನ್, 3) ಪ್ರಥ್ವಿರಾಜ್ ಜೋಗಿ 4) ಸುಮಿತ್ ಬಿ. ಆಚಾರ್ಯ 5) ವಿ.ರವಿರಾಜ ಮೂಲ್ಯ 6) ಅಭಿನ್ ರೈ 7) ತೇಜಾಕ್ಷ 8) ರವಿಸಂಜಯ್ ಜಿ.ಎಸ್. 9) ಶಿವಪ್ರಸಾದ್ ತುಂಬೆ, 10) ಪ್ರದೀಪ 11) ಶಾಹಿತ್ @ ಸಾಹಿತ್ 12) ಸಚಿನ್ @ ಸಚ್ಚು ರೊಟ್ಟಿಗುಡ್ಡೆ 13) ರಂಜಿತ್.
ತಲೆಮರೆಸಿಕೊಂಡಿರುವ ಹಿಂದು ಸಂಘಟನೆ ಮುಖಂಡ: ಈ ಪ್ರಕರಣದ ಇನ್ನೊಬ್ಬ ಆರೋಪಿ ಪುದು ಗ್ರಾಮ ನಿವಾಸಿ ಭರತ್ ರಾಜ್ ಯಾನೆ ಭರತ್ ಕುಮ್ಡೇಲು (29) ಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.
ಭರತ್ ಕುಮ್ಡೇಲು ಹಿಂದು ಸಂಘಟನೆಯಾದ ಬಜರಂಗದಳದ ಮುಖಂಡನಾಗಿದ್ದು, ಜಿಲ್ಲಾ ಮಟ್ಟದ ನಾಯಕನಾಗಿದ್ದಾನೆ.
Laxmi News 24×7