ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ನಾಲ್ವರು ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ನಡೆಸಲಾಯಿತು.
ಪಚ್ಚೆದೊಡ್ಡಿ ಗ್ರಾಮದ ಪಚ್ಚಮಲ್ಲ, ಗಣೇಶ್, ಗೋವಿಂದೇಗೌಡ, ಸಂಪು ಎಂಬವರನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆತಂದು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ನಾಲ್ವರನ್ನು ಕೂಡ ಬಂಧಿಸಿ ನ್ಯಾಯಾಧೀಶರ ಮುಂದೆ ಇಂದೇ ಹಾಜರುಪಡಿಸುವ ಸಾಧ್ಯತೆ ಇದೆ.
ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡುತ್ತಿದ್ದರಿಂದ ರೊಚ್ಚಿಗೆದ್ದ ದನಗಾಹಿಗಳು ಬೇಟೆಯಾಡಿದ್ದ ಹಸುವಿಗೆ ವಿಷ ಪ್ರಾಷನ ಮಾಡಿಸುವ ಮೂಲಕ ಮತ್ತು ಅದೇ ಹಸುವನ್ನು ತಿಂದು ಹುಲಿ ಸಾಯುವಂತೆ ಮಾಡಿದ್ದರು. ಬಳಿಕ ಅದರ ಕಳೇಬರವನ್ನು ಪೀಸ್- ಪೀಸ್ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಹುಲಿ ಬೇಟೆಯಾಡಿದ್ದ ಹಸುವಿನ ಕಳೇಬರಕ್ಕಾಗಿ ಅರಣ್ಯ ಇಲಾಖೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದು, ಶಿರಾದಿಂದ ಕುರಿಗಳನ್ನು ಮೇಯಿಸಲು ಬಂದಿದ್ದ ಕಂಬಣ್ಣ ಹಾಗೂ ಮಂಜುನಾಥ್ ಅವರ ವಿಚಾರಣೆ ಮುಂದುವರೆದಿದೆ. ಸದ್ಯ, ನಾಲ್ವರು ಆರೋಪಿಗಳಿಗೂ ಮೆಡಿಕಲ್ ಟೆಸ್ಟ್ ಮಾಡಿಸಿ ಅರಣ್ಯಾಧಿಕಾರಿಗಳು ಕರೆದೊಯ್ದಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುವಾಗ ಮಣ್ಣಿನಲ್ಲಿ ಹುದುಗಿಸಿದ್ದ ಹುಲಿಯ ಅರ್ಧ ಕಳೇಬರ ಪತ್ತೆಯಾಗಿತ್ತು. ಕೂಡಲೇ ಅಲರ್ಟ್ ಆದ ಅರಣ್ಯ ಇಲಾಖೆ ಸಿಬ್ಬಂದಿ ಅಲ್ಲಿ ಹುಡುಕಾಡಿದ್ದರು. ಆಗ ಅಲ್ಲಿ ಉಳಿದ ಭಾಗಗಳು ಪತ್ತೆಯಾಗಿದ್ದು, ಹುಲಿಯ ಉಗುರು, ಹಲ್ಲು ಹಾಗೂ 4 ಕಾಲುಗಳು ಸುರಕ್ಷಿತವಾಗಿವೆ. ಮೃತ ಹುಲಿಯು ಗಂಡಾಗಿದ್ದು, ಅದಕ್ಕೆ 12 ವರ್ಷ ವಯಸ್ಸು ಆಗಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದರು.
Laxmi News 24×7