ಬೆಂಗಳೂರು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಇಂದು ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಅಕ್ಟೋಬರ್ 12ರ ವರೆಗೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಇಂದು (ಅಕ್ಟೋಬರ್ 6) ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಕನಿಷ್ಠ 65 ಮಿಲಿ ಮೀಟರ್ನಿಂದ ಗರಿಷ್ಠ 115 ಮಿಲಿ ಮೀಟರ್ವರೆಗೆ ಅಂದರೆ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಕ್ಟೋಬರ್ 9 ರಿಂದ 12ರ ವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಭಾನುವಾರ ಹೆಚ್ಚಿನ ಬಿಸಿಲು ದಾಖಲಾಗಿದ್ದು, ಸಂಜೆ ವೇಳೆಗೆ ಕೆಲವೆಡೆ ಮಳೆಯಾಗಿದೆ. ಮುಂದಿನ 3 ದಿನಗಳ ಕಾಲ ಮೋಡ ಕವಿದ ವಾತಾವರಣದ ಜೊತೆಗೆ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಗರಿಷ್ಠ 30 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಬಹುದು ಎಂದು ನಿರೀಕ್ಷಿಸಲಾಗಿದ್ದು, ಅಕ್ಟೋಬರ್ 8ರ ಬಳಿಕ ಗರಿಷ್ಠ ತಾಪಮಾನ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ಅಕ್ಟೋಬರ್ನಲ್ಲಿ ಹೆಚ್ಚು ಮಳೆ: ದೇಶಾದ್ಯಂತ ಅಕ್ಟೋಬರ್ನಲ್ಲಿ ದೀರ್ಘಾವಧಿಯ ಸರಾಸರಿ (LPA) 75.4 ಮಿಲಿ ಮೀಟರ್ಗಿಂತ 115 ಪ್ರತಿಶತಕ್ಕಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅಕ್ಟೋಬರ್ 4 ರಂದು ಹೇಳಿದ್ದರು.
ಅಕ್ಟೋಬರ್ 5 (ಭಾನುವಾರ) ರಿಂದ ಅಕ್ಟೋಬರ್ 8 (ಮಂಗಳವಾರ) ರವರೆಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿತ್ತು.
ಶಕ್ತಿ ಚಂಡಮಾರುತ : ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಮಹಾರಾಷ್ಟ್ರ ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ವಾಯುಭಾರ ಕುಸಿತದಿಂದ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಅ. 7ರ ವರೆಗೆ ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿತ್ತು.
Laxmi News 24×7