ಬೆಳಗಾವಿ : ಪ್ರತಿ ವರ್ಷದಂತೆ ಈ ಬಾರಿಯೂ ಅಕ್ಟೋಬರ್ 23, 24 ಮತ್ತು 25ರಂದು ಮೂರು ದಿನಗಳ ಕಾಲ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಸಲ ನಾಡಿನ ಹೆಸರಾಂತ ವ್ಯಕ್ತಿಯ ಕೈಯಿಂದ ಉತ್ಸವ ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚನ್ನಮ್ಮನ ಕಿತ್ತೂರಿನಲ್ಲಿ ಕಿತ್ತೂರು ಉತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಶಾಸಕರು, ಜಿಲ್ಲಾಧಿಕಾರಿಗಳು ಸೋಮವಾರ ಸಭೆ ಮಾಡಿದ್ದಾರೆ. ಇದಾದ ಮೇಲೆ ಮತ್ತೊಂದು ಸಭೆ ಆಗಲಿದ್ದು, ಒಟ್ಟು ಮೂರು ಸಭೆ ಮಾಡಿ, ಉತ್ಸವಕ್ಕೆ ಅಂತಿಮ ರೂಪುರೇಷೆ ನೀಡಲಾಗುವುದು. 17 ಸಮಿತಿಗಳನ್ನು ರಚಿಸಲಾಗಿದೆ. ಹೊಸ ಕಲಾವಿದರಿಗೆ ಅವಕಾಶ ನೀಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿವೆ. ಹಲವಾರು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಶಾಸಕ ಬಾಬಾಸಾಹೇಬ ಪಾಟೀಲರ ನೇತೃತ್ವದಲ್ಲಿ ಈ ಬಾರಿ ಉತ್ಸವವನ್ನು ಒಳ್ಳೆಯ ರೀತಿಯಲ್ಲಿ ಮಾಡಲಾಗುವುದು ಎಂದರು.ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ತಾರತಮ್ಯದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸಂಗೊಳ್ಳಿ, ನಂದಗಡದಲ್ಲಿ ಅನೇಕ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಅದಕ್ಕೆ ಹೆಚ್ಚಿನ ಅನುದಾನ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಕಂದಾಯ ಸಚಿವರನ್ನು ಭೇಟಿಯಾಗಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಜಾಸ್ತಿ ಅನುದಾನ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ’ ಎಂದು ತಿಳಿಸಿದರು.ತಾರತಮ್ಯ ಹೋಗಲಾಡಿಸುತ್ತೇವೆ: ಸಂಗೊಳ್ಳಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದರೆ, ‘ಕಿತ್ತೂರು ಪ್ರಾಧಿಕಾರಕ್ಕೆ ಕಂದಾಯ ಸಚಿವರು ಅಧ್ಯಕ್ಷರಾಗಿದ್ದರಿಂದ ತಾರತಮ್ಯ ಆಗುತ್ತಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆ ರೀತಿ ಏನಿಲ್ಲ. ಎಲ್ಲವೂ ಮುಖ್ಯಮಂತ್ರಿಗಳ ಅಧೀನದಲ್ಲೇ ಬರುತ್ತವೆ. ಹಾಗಾಗಿ, ನೀವು ಹೇಳಿದಂತೆ ಕಿತ್ತೂರು ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಬೇಡಿಕೆ ಇಡುತ್ತೇವೆ. ತಾರತಮ್ಯ ಹೋಗಲಾಡಿಸಲು ನಾನು ಮತ್ತು ಶಾಸಕರು ಪ್ರಯತ್ನಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.
Laxmi News 24×7