ಬೆಂಗಳೂರು,ಡಿ.28-ಬಿಬಿಎಂಪಿ ಚುನಾವಣೆಗೆ ಇನ್ನು ಮುಹೂರ್ತ ನಿಗಧಿಯಾಗದಿದ್ದರೂ ಅಸಾದುದ್ದಿನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಹುಡುಕಾಟ ಆರಂಭಿಸಿದೆ. ಗ್ರೇಟರ್ ಹೈದ್ರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅದ್ಭುತ ಸಾಧನೆ ಮಾಡಿ ಬೀಗುತ್ತಿರುವ ಓವೈಸಿ ತನ್ನ ಮುಂದಿನ ಗುರಿಯನ್ನು ಕರ್ನಾಟಕದ ಮೇಲೆ ಇಟ್ಟಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿರುವ ಓವೈಸಿ ಇದರ ಜತೆಗೆ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ ಭವಿಷ್ಯದಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಮರ್ಥ ಅಭ್ಯರ್ಥಿಗಳಿಗಾಗಿ ಓವೈಸಿ ಹುಡುಕಾಟ ಆರಂಭಿಸಿದ್ದಾರೆ.
ಈಗಾಗಲೇ ಮುಸ್ಲೀಂ ಸಮುದಾಯದ ಕೆಲ ಬಿಬಿಎಂಪಿ ಮಾಜಿ ಸದಸ್ಯರನ್ನು ಸಂಪರ್ಕಿಸಿರುವ ಓವೈಸಿ ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಮನವೊಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. 198 ಇಲ್ಲವೇ 243 ವಾರ್ಡ್ಗಳಿಗೆ ಚುನಾವಣೆ ನಡೆದರೂ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧಿಸದೆ ಕೇವಲ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಸೂಕ್ತವಾದ ವಾರ್ಡ್ಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಬೆಂಗಳೂರಿನಲ್ಲಿ ನೆಲೆ ಕಂಡು ಕೊಳ್ಳುವುದು ಓವೈಸಿ ಪ್ಲಾನ್ ಆಗಿದೆ.
ಇದರ ಜತೆಗೆ ಮುಸ್ಲೀಂ ಮತದಾರರು ಹೆಚ್ಚಿರುವ ಪ್ರದೇಶಗಳಲ್ಲಿರುವ ಪ್ರಬಲ ನಾಯಕರೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದು ಅವರ ಮೂಲಕ ಪಕ್ಷದ ಬಲವರ್ಧನೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಅಭ್ಯರ್ಥಿಗಳು ದೇಶದ ಪ್ರಮುಖ ನಗರಗಳಲ್ಲಿ ನಡೆದ ಚುನಾವಣೆಯಲ್ಲಿ ಗಣನೀಯ ಸಾಧನೆ ತೋರುತ್ತಿರುವುದರಿಂದ ಬೆಂಗಳೂರಿನ ಕೆಲ ಮಾಜಿ ಶಾಸಕರು ಆ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.