ಬೆಂಗಳೂರು, ಡಿ.28- ಪ್ರತಿ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಂಗೀಕರಿಸಲ್ಪಟ್ಟಿದ್ದ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಕಾಯ್ದೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ನಾಳೆ ರಾಜ್ಯಪಾಲ ವಿ.ಆರ್.ವಾಲಾ ಅವರ ಅಂಕಿತಕ್ಕೆ ಕಳುಹಿಸಿಕೊಡಲಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ತೀರ್ಮಾನ ಕೈಗೊಂಡಿದ್ದೇವೆ. ನಾಳೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಈ ಕಾಯ್ದೆಯು 1964ರಿಂದಲೂ ಜಾರಿಯಲ್ಲಿದೆ. ಹಿಂದಿನ ಕಾಯ್ದೆಯಲ್ಲಿ 12 ವರ್ಷ ಮೇಲ್ಪಟ್ಟ ಹಸು, 13 ವರ್ಷ ಮೇಲ್ಪಟ್ಟ ಎಮ್ಮೆಯನ್ನು ವಧೆ ಮಾಡಬಹುದೆಂಬ ನಿಯಮವಿತ್ತು. ಆದರೆ, ಹೊಸದಾಗಿ ಜಾರಿಯಾಗಿರುವ ಕಾಯ್ದೆಯಲ್ಲಿ ಯಾವುದೇ ರೀತಿಯ ಪ್ರಾಣಿಗಳನ್ನು ಹತ್ಯೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.
ಅಷ್ಟಕ್ಕೂ ರಾಜ್ಯ ಸರ್ಕಾರ ಈ ಕಾಯ್ದೆಯನ್ನು ಹೊಸದಾಗಿ ಜಾರಿ ಮಾಡಿಲ್ಲ. ಹಿಂದೆ ಇದ್ದ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ಮಾಡಲಾಗಿದೆ. ಗೋಮಾಂಸ ತಿನ್ನುವುದಕ್ಕಾಗಲಿ ಅಥವಾ ಚರ್ಮ ಮರಾಟ ಮಾಡುವುದಾಗಲಿ ಸೇರಿದಂತೆ ಇದರಡಿ ಯಾವುದೇ ರೀತಿಯ ನಿರ್ಬಂಧ ಹಾಕಿಲ್ಲ. ಗೋಹತ್ಯೆ ಮಾಡಿದವರಿಗೆ ಹಿಂದೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತಿರಲಿಲ್ಲ. ಈಗ ಈ ಹತ್ಯೆಯಲ್ಲಿ ಭಾಗಿಯಾಗುವವರಿಗೆ ಶಿಕ್ಷೆ ನೀಡುವ ಹಾಗೂ ದಂಡ ವಿಧಿಸುವ ಅಧಿಕಾರವನ್ನು ತಹಸೀಲ್ದಾರ್ ಮತ್ತು ಸಂಬಂಧಪಟ್ಟ ಪೊಲೀಸರಿಗೆ ನೀಡಲಾಗಿದೆ ಎಂದು ಹೇಳಿದರು