ಬೆಂಗಳೂರು: ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಒಪ್ಪಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರು ರೌಂಡ್ಸ್ ವೇಳೆ ಮಾತನಾಡಿದ ಅವರು, ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಾವು ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಅನುದಾನ ಕೇಳಿದ್ದೇವೆ ಎಂದು ತಿಳಿಸಿದರು.
ಮುಂದೆ ಜಿಬಿಎ ವ್ಯಾಪ್ತಿಗೆ ಸೇರಲು ಅರ್ಹತೆ ಇರುವ ಜಿಬಿಎ ಗಡಿಭಾಗದ, ಬೆಂಗಳೂರು ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದೇನೆ. ಕೆಲವು ನಗರ ಸಭೆಗಳು, ಪಟ್ಟಣ ಪಂಚಾಯಿತಿಗಳು ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಗಡಿಪ್ರದೇಶಗಳು ನನ್ನ
ಇಲಾಖೆ ವ್ಯಾಪ್ತಿಗೆ ಸೇರಿದ್ದು, ಶುಕ್ರವಾರ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದಿದ್ದೇನೆ. ಈ ಪ್ರದೇಶದ ಕೆಲವು ಭಾಗಗಳನ್ನು ಮುಂದಿನ ದಿನಗಳಲ್ಲಿ ಜಿಬಿಎ ಅಡಿಯಲ್ಲಿ ಬರುವ ಬೆಂಗಳೂರು ಪಾಲಿಕೆಗಳ ವ್ಯಾಪ್ತಿಗೆ ಸೇರಿಸುವ ಸಂದರ್ಭವಿದೆ. ಬಿ.ಎಸ್. ಪಾಟೀಲ್ ಅವರ ಸಮಿತಿ ಮೂಲಕ ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ತಯಾರಾಗುತ್ತಿದೆ. ಈ ವಿಚಾರವಾಗಿ ಶಾಸಕರು, ಸಂಸದರು, ಸಾರ್ವಜನಿಕರು ಸಂಘ ಸಂಸ್ಥೆಗಳ ಜೊತೆ ಚರ್ಚಿಸಲು ಸೂಚಿಸಿದ್ದೇವೆ ಎಂದರು.
ಈ ವಾರಾಂತ್ಯದಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಮೂಲಕ ಸಾರ್ವಜನಿಕರನ್ನು ಭೇಟಿ ಮಾಡಲಾಗುವುದು. ಅದಾದ ಬಳಿಕ ಐಟಿ-ಬಿಟಿ ಸಂಸ್ಥೆಗಳೊಂದಿಗೆ ಸಭೆ ನಡೆಸುತ್ತೇವೆ. ಅದರಲ್ಲೂ ಮಹದೇವಪುರ ಹಾಗೂ ಕೆ.ಆರ್ ಪುರಂ ವ್ಯಾಪ್ತಿಯಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
Laxmi News 24×7