ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಸಂಪುಟ ಪುನಾರಚನೆ ಆಗಲಿದ್ದು, ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎರಡೂವರೆ ವರ್ಷಗಳ ಬಳಿಕ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಸಚಿವ ಸಂಪುಟದಿಂದ ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕೆಂದು ನಿರ್ಧಾರ ಆಗಿದೆ. ಸಂಪುಟಕ್ಕೆ ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಆದ್ರೆ ನಾಯಕತ್ವ ಬದಲಾವಣೆ ಹೈಕಮಾಂಡ್ಗೆ ಬಿಟ್ಟಿದ್ದು. ಸಚಿವ ಸಂಪುಟ ಪುನರ್ ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಅರ್ಹತೆ ಮೀರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ. ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದರೆ ಕೆಲಸದಲ್ಲಿ ಅಲ್ಲ. ಇನ್ನೂ ಮಾಡುವ ಕೆಲಸ ಬಾಕಿ ಇದೆ. ಅವಕಾಶದ ವಿಚಾರದಲ್ಲಿ ನನಗೆ ಸಂತೃಪ್ತಿ ಇದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಇಂತಹ ವಿಷಯಗಳ ಬಗ್ಗೆ ನಾನು ಮಾತನಾಡಲ್ಲ. ಸಿಎಂ ಜವಾಬ್ದಾರಿ, ಕೆಲಸ ಕೊಟ್ಟಿದ್ದಾರೆ. ರಾಜಕೀಯ ಮಾತನಾಡಲು ಪಕ್ಷದ ಚೌಕಟ್ಟಿದೆ. ಹೈಕಮಾಂಡ್ ಇದೆ, ಅಲ್ಲಿ ಏನು ಹೇಳಬೇಕು ಹೇಳುತ್ತೇನೆ. ಹೈಕಮಾಂಡ್ ಕಾಲಕಾಲಕ್ಕೆ ತೀರ್ಮಾನ ಮಾಡ್ತಾರೆ. ಬಿಜೆಪಿಗರು ದ್ರಾಕ್ಷಿ ಗೊಂಚಲು ಹುಳಿ ಅನ್ನುವ ರೀತಿ ಆಗಿದೆ. ರಾಜಕೀಯ ಮಾತನಾಡಿ ಬೆಳೆ ಬೇಯಿಸಿಕೊಳ್ಳುತ್ತಾರೆ. ಬಿಜೆಪಿಗರಿಗೆ ಬೇರೆ ಕೆಲಸ ಇಲ್ಲ ಎಂದು ಸಚಿವರು ಟೀಕಿಸಿದರು.
Laxmi News 24×7