ಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ (ಶುಕ್ರವಾರ) ಕೊನೆಗೊಂಡಿದೆ. ಡೆಡ್ ಲೈನ್ ಬಗೆಗಿನ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪ್ಲೀಸ್ ಆಸ್ಕ್ ಡಿ.ಕೆ.ಶಿವಕುಮಾರ್ (ದಯವಿಟ್ಟು ಡಿಕೆಶಿ ಅವರನ್ನು ಕೇಳಿ) ಎಂದು ಹೇಳಿ ನಿರ್ಗಮಿಸಿದ್ದಾರೆ.
ವಿಧಾನಸೌಧದ ಬಳಿ ಇಂದು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸಿದರು.
ನಗರದಲ್ಲಿ ಬಾಯ್ತೆರೆದಿದ್ದ ರಸ್ತೆಗುಂಡಿಗಳನ್ನು ಮುಚ್ಚುವ ಸಂಬಂಧ ಸಿದ್ದರಾಮಯ್ಯ ಅವರು ಎರಡು ಬಾರಿ ನಗರ ಪ್ರದಕ್ಷಿಣೆ ಮಾಡಿ ಪರಿಶೀಲಿಸಿದ್ದರು. ಅಕ್ಟೋಬರ್ 31ರ ಒಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು, ಇಲ್ಲದಿದ್ದರೆ ಇಂಜಿನಿಯರ್ಗಳನ್ನೇ ಹೊಣೆಯಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ ಅವರು ಎಕ್ಸ್ ಪೋಸ್ಟ್ ಮಾಡಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ದ ಹರಿಹಾಯ್ದಿದ್ದಾರೆ. ನಗರದಲ್ಲಿ ಮೃತ್ಯುಕೂಪಗಳಾಗಿರುವ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ನೆನೆಪಿದೆಯಾ? ಗುಂಡಿ ಮುಚ್ಚಲು ಹಣ ಬಿಡುಗಡೆ ಮಾಡಿದ್ದೀರಾ ಅಥವಾ ನಿಮ್ಮ ಮಾತಿಗೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲವೋ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
Laxmi News 24×7