ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರು ಚಳಿ, ಗಾಳಿಯೆನ್ನದೆ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದೆ.
ವಿಜಯೇಂದ್ರಗೆ ಹುಟ್ಟಹಬ್ಬದ ಶುಭಾಶಯ ಕೋರಿದ ರೈತರು: ರೈತರ ಅಹೋರಾತ್ರಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರೂ ಭಾಗವಹಿಸಿದರು. ಪ್ರತಿಭಟನೆಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ತಮ್ಮ ಹುಟ್ಟುಹಬ್ಬದ ನಡುವೆಯೂ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಅನ್ನದಾತರ ಪರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲೇ ರೈತರು ವಿಜಯೇಂದ್ರಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ರೈತರ ಪ್ರತಿಭಟನೆ ಸ್ಟೇಜ್ ಮೇಲೆಯೇ ವಿಜಯೇಂದ್ರ ಮಲಗಿದ್ದರು. ಮಧ್ಯರಾತ್ರಿ ವೇಳೆಗೆ ಅವರನ್ನು ಎಬ್ಬಿಸಿದ ರೈತರು ಜನ್ಮದಿನದ ಶುಭಾಶಯ ತಿಳಿಸಿದರು.
ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಪ್ರತಿಭಟನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ”ಕಳೆದ 6 ದಿನಗಳಿಂದ ಕಬ್ಬು ಬೆಳೆಗಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಇದಕ್ಕೆ ಕವಡೆಕಾಸಿನ ಕಿಮ್ಮತ್ತನ್ನೂ ನೀಡುತ್ತಿಲ್ಲ. ನಾನು ಇಲ್ಲಿ ಬಂದು, ಜಿಲ್ಲಾಧಿಕಾರಿಗೂ ಕೂಡ ಸರ್ಕಾರದ ಗಮನಕ್ಕೆ ತರುವಂತೆ ವಿನಂತಿ ಮಾಡಿದ್ದೇನೆ. ಈ ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಗುರ್ಲಾಪುರದಲ್ಲಿ ಹತ್ತಿರುವ ಪ್ರತಿಭಟನಾ ಕಿಡಿ ರಾಜ್ಯಾದ್ಯಂತ ಹಬ್ಬುತ್ತಿದೆ. ಎಲ್ಲಾ ತಾಲೂಕುಗಳಲ್ಲೂ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಪರಿಸ್ಥಿತಿ ಕೈಮೀರುವ ಮುನ್ನ ಸರ್ಕಾರದ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಬುಧವಾರ ಸಚಿವರು ಬರುತ್ತಾರೆ ಎಂಬ ಮಾಹಿತಿ ಇದೆ, ಮುಂದೆ ಏನಾಗುತ್ತದೆ ಎಂದು ನೋಡೋಣ” ಎಂದು ಹೇಳಿದರು.
Laxmi News 24×7