ಬೆಳಗಾವಿ: ಕಬ್ಬಿಗೆ 3,500 ರೂ. ದರ ನಿಗದಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ರೈತರು ಕಳೆದ 7 ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿದ್ದು, ಬೆಳಗಾವಿ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾದ್ಯಂತ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ಬಹುತೇಕ ಎಲ್ಲ ತಾಲೂಕುಗಳಲ್ಲಿ ದಿನನಿತ್ಯ ಪ್ರತಿಭಟನೆಗಳು ನಡೆಯುತ್ತಿವೆ. ಈಗ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕೂಡ ಮುಂದಾಗಿದೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ-4 ಅನ್ನು ತಡೆದು ರಸ್ತೆ ಮೇಲೆಯೇ ಧರಣಿ ಕುಳಿತರು. ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಮೊಳಗಿಸಿದರು.

ಟೈರ್ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು. ಈ ವೇಳೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಉಂಟಾಯಿತು.ಹೆದ್ದಾರಿ ತಡೆದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಕೆಲಕಾಲ ಪರದಾಡಿದರು. ಸರ್ವೀಸ್ ರಸ್ತೆಯಲ್ಲೂ ವಾಹನಗಳನ್ನು ತಡೆದ ಕರವೇ ಕಾರ್ಯಕರ್ತರು, ಕಬ್ಬು ಬೆಳೆಗಾರರ ಬೇಡಿಕೆ ತಕ್ಷಣ ಈಡೇರಿಸುವಂತೆ ಆಗ್ರಹಿಸಿದರು. ಪ್ರತಿಭಟನೆ ವಿಕೋಪಕ್ಕೆ ಹೋಗುತ್ತಿದ್ದಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ರಾಜ್ಯ ಸಂಚಾಲಕ ಸುರೇಶ ಗವನ್ನವರ ಸೇರಿ ಇನ್ನಿತರ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ತಮ್ಮ ವಾಹನದಲ್ಲಿ ಕರೆದೊಯ್ದರು.
Laxmi News 24×7