ಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಬೆಳಗಾವಿಗೆ ಆಗಮಿಸಿ ಸಂಧಾನ ಮಾತುಕತೆ ನಡೆಸಿದರು. ನಾಳೆಯೇ ಸರ್ಕಾರ ಒಂದು ನಿರ್ಧಾರ ಪ್ರಕಟಿಸಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ, ಸಚಿವರು ಏಳನೇ ತಾರೀಖಿನವರೆಗೂ ಕಾಲಾವಕಾಶ ಕೇಳಿದರು. ಇದಕ್ಕೆ ಕಬ್ಬು ಬೆಳೆಗಾರರು ಒಪ್ಪದೇ ಇದ್ದಾಗ ಮಾತುಕತೆ ಮುರಿದು ಬಿತ್ತು. ಇದರಿಂದ ಆಕ್ರೋಶಗೊಂಡ ರೈತರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ನಡೆಯುತ್ತಿರುವ ಹೋರಾಟಗಾರರನ್ನು ಭೇಟಿ ಮಾಡಿ, ಸರ್ಕಾರ ಪರವಾಗಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್, ನೀವು ಅನೇಕ ವಿಚಾರಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೀರಿ. ಇದರಿಂದ ನಾಳೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ರೈತ ಮುಖಂಡರ ಜೊತೆ ಮಾತುಕತೆ ನಡೆಸಲಾಗುತ್ತದೆ, ಆ ಬಳಿಕ ಏಳನೇ ತಾರೀಖು ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ಕರೆಯಲಾಗುವುದು ಎಂದು ತಿಳಿಸಿದರು.
Laxmi News 24×7