ಬೆಂಗಳೂರು: ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸಿ, ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವಂತೆ ಸಂಪನ್ಮೂಲ ಕ್ರೋಢೀಕರಣ ಸಮಿತಿ (RMC) ತನ್ನ ಅಂತಿಮ ವರದಿಯಲ್ಲಿ ಶಿಫಾರಸು ಮಾಡಿದೆ.
ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿ ತನ್ನ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳೊಂದಿಗೆ ವರದಿ ಸಲ್ಲಿಸಿದೆ.
ಈ ಶಿಫಾರಸಿನಲ್ಲಿ ಪ್ರಮುಖವಾಗಿ ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸಲು ಶಿಫಾರಸು ಮಾಡಲಾಗಿದೆ. ಸೇವೆ ಬಳಕೆ ಅನುಗುಣವಾಗಿ ಶುಲ್ಕ ವಿಧಿಸುವ ಪ್ರಮಾಣಾತ್ಮಕ ಬಿಲ್ಲಿಂಗ್ (volumetric billing) ವ್ಯವಸ್ಥೆಗೆ ಹಂತ, ಹಂತವಾಗಿ ಸ್ಥಳಾಂತರಿಸಲು ಶಿಫಾರಸು ಮಾಡಲಾಗಿದೆ. ಹಣ ದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸಲು ಶಿಫಾರಸು ಮಾಡಲಾಗಿದೆ.
ಶಿಫಾರಸಿನಲ್ಲಿ ತೆರಿಗೆ ಸುಧಾರಣೆ ಮೂಲಕ ಕೆಲ ಪ್ರಮುಖ ರಾಜಸ್ವ ಮೂಲಗಳ ಮೇಲಿನ ಅತಿಯಾದ ಅವಲಂಬನೆಯನ್ನು ಕಡಿಮೆ ಮಾಡಬೇಕು ಮತ್ತು ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸುವಂತೆ ಸಲಹೆ ನೀಡಿದೆ. ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಹರಾಜು ಆಧಾರಿತ ಡಿಜಿಟಲ್ ಸನ್ನದುಗಳನ್ನು ನೀಡುವಂತೆ ಸಲಹೆ ನೀಡಲಾಗಿದೆ. ವೈಜ್ಞಾನಿಕ ಆಸ್ತಿ ಮೌಲ್ಯಮಾಪನ, ಸಾರ್ವಜನಿಕ-ಖಾಸಗಿ ಪಾಲುದಾರಿಕೆಗಳ ಅಡಿಯಲ್ಲಿ ಗುತ್ತಿಗೆಯನ್ನು ವಿಸ್ತರಿಸುವುದು ಮತ್ತು ನಗರ ಭೂ-ಸ್ವತ್ತುಗಳನ್ನು ನಗದೀಕರಿಸುವ ಮೂಲಕ ಆದಾಯದ ಸಾಮರ್ಥ್ಯವನ್ನು ಹೆಚ್ಚಿಸುವಂತೆ ಶಿಫಾರಸಿನಲ್ಲಿ ತಿಳಿಸಲಾಗಿದೆ.
ಸಿಬ್ಬಂದಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ ಇಲಾಖಾ ಸಾಮರ್ಥ್ಯವನ್ನು ಹೆಚ್ಚಿಸುವುದು, ಆಸ್ತಿ ಸಮೀಕ್ಷೆಗಳನ್ನು ನಿಯತಕಾಲಿಕವಾಗಿ ಮಾಡುವುದು ಮತ್ತು ತೆರಿಗೆಯೇತರ ಆದಾಯ ಮತ್ತು ಆಸ್ತಿ ನಗದೀಕರಣದ ಮೇಲ್ವಿಚಾರಣೆ ಮಾಡಲು ಆರ್ಥಿಕ ಇಲಾಖೆಯಲ್ಲಿ ಆರ್ಥಿಕ ನೀತಿ ವಿಭಾಗವನ್ನು ರಚಿಸುವಂತೆ ಶಿಫಾರಸು ಮಾಡಲಾಗಿದೆ.
Laxmi News 24×7