ಬೆಳಗಾವಿ: ರಿಕವರಿ ಆಧಾರದ ಮೇಲೆ ಪ್ರತಿ ಟನ್ ಕಬ್ಬಿಗೆ 3,300 ರೂ. ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದ್ದಂತೆ ಒಂದೆಡೆ ವಿಜಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದೆಡೆ 3,500 ರೂ. ದರವನ್ನೇ ನಿಗದಿಪಡಿಸುವಂತೆ ಹೋರಾಟ ಮುಂದುವರಿದಿದೆ. ಬೈಲಹೊಂಗಲ ಬಂದ್ ಮಾಡಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈಲಹೊಂಗಲ ನಗರದಲ್ಲಿ ಇಂದು ಬೆಳಗ್ಗೆಯಿಂದ ಅಂಗಡಿ – ಮುಂಗಟ್ಟು ಬಂದ್ ಮಾಡಿರುವ ಹೋರಾಟಗಾರರು, ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಘೋಷಣೆ ಮೊಳಗಿಸಿದರು. ಪ್ರತಿ ಟನ್ಗೆ 3,500 ರೂ. ಘೋಷಣೆ ಮಾಡಲೇಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಯುತ್ತದೆ. ನಿನ್ನೆ ಮುಖ್ಯಮಂತ್ರಿಗಳು ರಿಕವರಿ ಆಧಾರದ ಮೇಲೆ 3,300 ರೂ. ನೀಡುವುದಾಗಿ ಹೇಳಿರುವುದು ಅವೈಜ್ಞಾನಿಕ. ಇದನ್ನು ಕಬ್ಬು ಬೆಳೆಗಾರರು ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಬೈಲಹೊಂಗಲಕ್ಕೆ ಬರುವ ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಅಂಗಡಿಗಳ ಮಾಲೀಕರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ರೈತರ ಹೋರಾಟಕ್ಕೆ ಕೈಜೋಡಿಸಿದ್ದಾರೆ. ನಗರದ ಚನ್ನಮ್ಮ ವೃತ್ತದಲ್ಲಿ ರಾಜಕೀಯ ನಾಯಕರು, ರೈತ ಮುಖಂಡರು ಕಳೆದ ಆರು ದಿನಗಳಿಂದ ಅಹೋರಾತ್ರಿ ಧರಣಿ ಕುಳಿತಿದ್ದಾರೆ. ಇಂದು ಬೈಲಹೊಂಗಲ ಬಂದ್ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ.
ಒಂದು ಟನ್ ಕಬ್ಬಿಗೆ ಹಿಂದೆ ನಿಗದಿಯಾಗಿದ್ದ 3,200ರ ಜತೆಗೆ ಹೆಚ್ಚುವರಿಯಾಗಿ 50 ರೂ. ಹಾಗೂ ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ 50 ಪಾವತಿಸಲಿದೆ. ಸಾಗಣೆ ಮತ್ತು ಕಟಾವು ವೆಚ್ಚ ಹೊರತುಪಡಿಸಿ ಶೇ 11.25 ಇಳುವರಿ ಪ್ರಮಾಣ ಇರುವ ಪ್ರತಿ ಟನ್ ಕಬ್ಬಿಗೆ 3,300 ಹಾಗೂ ಶೇ. 10.5 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,200 ದರ ಸಿಗಲಿದೆ.
Laxmi News 24×7