ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೊನಾಗೆ ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಎಎಸ್ಐಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್ಐ ಕಳೆದ ಒಂದು ವಾರದಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜುಲೈ 1ರಿಂದ 7ರವರೆಗೆ ಹೋಂ ಕ್ವಾರಂಟೈನ್ನಲ್ಲಿ ಇದ್ದ ಎಎಸ್ಐಗೆ 7ರಂದು ಕೊರೊನಾ ದೃಢಪಟ್ಟಿದ್ದರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹಾವೇರಿ ಮೂಲದ 58ವರ್ಷ ವಯಸ್ಸಿನ ಎಎಸ್ಐ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೇ ಪೊಲೀಸ್ ಠಾಣೆಯ ಚಾಲಕರೊಬ್ಬರಿಗೂ ಕೊರೊನಾ ದೃಢಪಟ್ಟಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಎಸ್ಐ ಸಾವಿನ ನಂತರ ಹುಬ್ಬಳ್ಳಿ ಪೊಲೀಸರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.
ಹುಬ್ಬಳ್ಳಿಯ ವಿದ್ಯಾನಗರ, ಘಂಟಿಕೇರಿ, ಬೆಂಡಿಗೇರಿ, ಅಶೋಕ್ ನಗರ, ಸಬರಬನ್ ಮತ್ತು ಶಹರ ಠಾಣೆಯ ಹಲವು ಸಿಬ್ಬಂದಿಗಳಿಗೂ ಸಹ ಈಗಾಗಲೇ ಕೊರೊನಾ ವೈರಸ್ ದೃಢಪಟ್ಟ ಪರಿಣಾಮ ಹುಬ್ಬಳ್ಳಿ ಪೊಲೀಸರಿಗೆ ಕೊರೊನಾ ವೈರಸ್ ಭೀತಿ ಶುರುವಾಗಿದೆ.