ಬೆಂಗಳೂರು: ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ತರಣ್ ರಾಜ್ ತಮ್ಮ ಸೆಲ್ಗಳಲ್ಲಿ ಮೊಬೈಲ್ ಬಳಸುತ್ತಿದ್ದಾರೆ ಎಂಬ ವಿಡಿಯೋ ವೈರಲ್ ಆಗಿವೆ. ಈ ವಿಚಾರ ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸ ಒದಗಿಸಿವೆ. ಉಮೇಶ್ ರೆಡ್ಡಿ ಸೆಲ್ನಲ್ಲಿ ಟಿವಿ ವ್ಯವಸ್ಥೆ ಇರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿದೆ.
ಬ್ಯಾರಕ್ ಪರಿಶೀಲನೆಗೆ ಎಡಿಜಿಪಿ ಸೂಚನೆ: ಈ ದೃಶ್ಯಗಳು ಬಹಿರಂಗವಾಗುತ್ತಿದ್ದಂತೆ ಸಂಬಂಧಪಟ್ಟ ಕೈದಿಗಳ ಬ್ಯಾರಕ್ಗಳನ್ನು ಪರಿಶೀಲನೆ ನಡೆಸುವಂತೆ ಜೈಲಾಧಿಕಾರಿಗಳಿಗೆ ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಎಡಿಜಿಪಿ ಬಿ.ದಯಾನಂದ್ ಸೂಚಿಸಿದ್ದಾರೆ.
ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಆರೋಪಿ ತರಣ್ ರಾಜ್ಗೆ ಸೆಲ್ನಲ್ಲಿ ಮೊಬೈಲ್ ಫೋನ್ಗಳು, ಟಿವಿ ವ್ಯವಸ್ಥೆ ಸೇರಿದಂತೆ ಇತರ ಸೌಲಭ್ಯಗಳು ಲಭ್ಯವಾಗುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.
ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ ಎಂದ ಸಿಎಂ: ಕೈದಿಗಳಿಗೆ ವಿಶೇಷ ಆತಿಥ್ಯ ದೊರೆಯುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಅದರ ಬಗ್ಗೆ ನನಗೆ ಗೊತ್ತಿಲ್ಲ, ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ” ಎಂದು ತಿಳಿಸಿದ್ದಾರೆ.
ಯಾರೀ ಉಮೇಶ್ ರೆಡ್ಡಿ: ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆ ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ 2022ರಲ್ಲಿ ಆದೇಶಿಸಿತ್ತು. ಬೆಂಗಳೂರಲ್ಲಿ 1998ರ ಫೆ.28ರಂದು ವಿಧವೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಉಮೇಶ ರೆಡ್ಡಿ ತಪ್ಪಿತಸ್ಥ ಎಂದು ಬೆಂಗಳೂರು ಕೋರ್ಟ್ ತೀರ್ಪು ನೀಡಿ, ಮರಣದಂಡನೆ ವಿಧಿಸಿತ್ತು. ಬಳಿಕ ರಾಷ್ಟ್ರಪತಿಗಳಿಗೆ ಉಮೇಶ್ ರೆಡ್ಡಿ ಕ್ಷಮಾಪಣಾ ಅರ್ಜಿ ಸಲ್ಲಿಸಿದ್ದರು. 2013ರಲ್ಲಿ ಮೇ 12 ರಂದು ರಾಷ್ಟ್ರಪತಿಗಳು, ಉಮೇಶ್ ರೆಡ್ಡಿ ಅರ್ಜಿಯನ್ನು ತಿರಸ್ಕರಿಸಿದ್ದರು.
ಉಮೇಶ್ ರೆಡ್ಡಿ ಹಿನ್ನೆಲೆ: ಉಮೇಶ್ ರೆಡ್ಡಿ ಮೂಲತಃ ಚಿತ್ರದುರ್ಗದವನು, 1969ರಲ್ಲಿ ಜನಿಸಿದ್ದ ಈತನ ಮೂಲ ಹೆಸರು ಬಿಎ ಉಮೇಶ್. ಸಿಆರ್ಪಿಎಫ್ಗೆ ಆಯ್ಕೆಯಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ ಅನುಭವ ಸಹ ಇದೆ. ಸೈನಿಕನಾಗಿ ವೃತ್ತಿ ಜೀವನ ಆರಂಭಿಸಿದ ಉಮೇಶ್ ರೆಡ್ಡಿ, ಬಳಿಕ ಪೊಲೀಸ್ ಆಗಿ ಸೇವೆ ಸಲ್ಲಿಸಿದ್ದ. ಆದರೆ, ಆ ಬಳಿಕ ಆತ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ.
Laxmi News 24×7