ಯೂಟ್ಯೂಬರ್ ಸಮೀರ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಕೋರಿದ್ದ ಅರ್ಜಿ ವಿಚಾರಣೆ ಧಾರವಾಡ ಪೀಠಕ್ಕೆ ವರ್ಗಾವಣೆ
ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ವಿಡಿಯೋ ತುಣುಕು ಬಳಸಿ ವರದಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸಿ, ಹೈಕೋರ್ಟ್ನ ಬೆಂಗಳೂರು ಪೀಠ ಆದೇಶಿಸಿದೆ.
ತನ್ನ ವಿರುದ್ಧ ಬಳ್ಳಾರಿಯಲ್ಲಿ ದಾಖಲಾಗಿರುವ ಪ್ರಕರಣ ಪ್ರಶ್ನಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಸಮೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕಸದಸ್ಯ ಪೀಠ ಪ್ರಕರಣವನ್ನು ವರ್ಗಾವಣೆ ಮಾಡಿ ಆದೇಶಿಸಿತು.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಬಳ್ಳಾರಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಅರ್ಜಿಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ಎಫ್ಐಆರ್ಗೆ ತಡೆ ನೀಡಿ ಮಧ್ಯಂತರ ರಕ್ಷಣೆ ಒದಗಿಸಿರುವುದನ್ನು ಮುಂದುವರಿಸಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಸರ್ಕಾರದ ವಕೀಲರು, ಬೇರೆ ಪೀಠಕ್ಕೆ ಅರ್ಜಿ ವರ್ಗಾವಣೆ ಮಾಡಲಾಗದು. ಧಾರವಾಡ ಪೀಠದಲ್ಲಿ ಹೊಸದಾಗಿ ಅರ್ಜಿದಾರರು ಅರ್ಜಿ ಸಲ್ಲಿಸಬೇಕು. ಮಧ್ಯಂತರ ಪರಿಹಾರ ಮುಂದುವರಿಸಬಾರದು ಎಂದು ಪೀಠಕ್ಕೆ ಮನವಿ ಮಾಡಿದ್ದರು.
Laxmi News 24×7