ಬಾಗಲಕೋಟೆ: ರಾಜ್ಯದಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಅದರಲ್ಲೂ ಜಿಲ್ಲೆಯ ಮುಧೋಳ ತಾಲೂಕಿನ ರೈತರಿಗೆ ಎದುರಾಗುತ್ತಿರುವ ತೀವ್ರ ಸಮಸ್ಯೆಗಳ ಕುರಿತು ಅಬಕಾರಿ ಸಚಿವ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರ್.ಬಿ.ತಿಮ್ಮಾಪುರ ಅವರು ಕೇಂದ್ರ ಕಬ್ಬು ಮತ್ತು ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕ ಅರವಿಂದ ಕುಮಾರ್ ರಾವತ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಬ್ಬು ಮತ್ತು ತೈಲ ಬೀಜಗಳ ನಿರ್ದೇಶನಾಲಯದ ನಿರ್ದೇಶಕರಾದ ಅರವಿಂದ ಕುಮಾರ್ ರಾವತ್ ಅವರನ್ನು ಭೇಟಿಯಾದ ಸಚಿವರು, ಕಳೆದ ಕೆಲವು ವರ್ಷಗಳಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಕಬ್ಬಿನ ಬೆಲೆ ಕುಸಿತ, ಸಕ್ಕರೆ ಕಾರ್ಖಾನೆಗಳ ಸಾಲ ಮರುಪಾವತಿ ವಿಳಂಬ, ಕನಿಷ್ಠ ಬೆಂಬಲ ಬೆಲೆ (ಎಫ್ಆರ್ಪಿ) ಹೆಚ್ಚಳದ ಕೊರತೆ, ರಫ್ತು ನೀತಿಯಲ್ಲಿ ಏರ್ಪಡುತ್ತಿರುವ ಬದಲಾವಣೆಗಳಿಂದಾಗಿ ಉಂಟಾಗುತ್ತಿರುವ ಅನಿಶ್ಚಿತತೆ ಹಾಗೂ ಮುಧೋಳ ಸೇರಿದಂತೆ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ವಿಶೇಷವಾಗಿ ತಲುಪುತ್ತಿರುವ ತೊಂದರೆಗಳನ್ನು ಗಮನಕ್ಕೆ ತಂದರು.
ಕರ್ನಾಟಕದಲ್ಲಿ ಕಬ್ಬು ಬೆಳೆ ರೈತರ ಜೀವನಾಡಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಹು ಭಾಗದಲ್ಲಿ ಸಾವಿರಾರು ರೈತರು ಕಬ್ಬು ಬೆಳೆಯ ಮೇಲೆಯೇ ಅವಲಂಬಿತರಾಗಿದ್ದಾರೆ. ಆದರೆ, ಪ್ರಸ್ತುತ ಸ್ಥಿತಿಯಲ್ಲಿ ಅವರಿಗೆ ನ್ಯಾಯ ದೊರಕುತ್ತಿಲ್ಲ. ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಬ್ಬಿನ ಎಫ್ಆರ್ಪಿ ಬೆಲೆ ಹೆಚ್ಚಳ, ಸಕ್ಕರೆ ರಫ್ತು ನೀತಿಯಲ್ಲಿ ಸ್ಥಿರತೆ, ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರದ ಸಹಾಯಧನ ಮತ್ತು ರೈತರ ಬಾಕಿ ಪಾವತಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದರು.
ಸಚಿವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ನಿರ್ದೇಶಕರು, ಕೇಂದ್ರ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
Laxmi News 24×7