ಬೆಂಗಳೂರು: ಪೊಲೀಸ್ ಠಾಣೆಯಲ್ಲೇ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಸಂಬಂಧ ವಿವೇಕನಗರ ಠಾಣೆಯ ಇನ್ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ವಿವೇಕನಗರ ಠಾಣೆ ಪಿಐ ಶಿವಕುಮಾರ್ ಹಾಗೂ ಮೂವರು ಸಿಬ್ಬಂದಿ ಅಮಾನತುಗೊಂಡವರು.
ಗಲಾಟೆ ಸಂಬಂಧ ದರ್ಶನ್ ಎಂಬಾತನನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಗಾಯಗೊಂಡಿದ್ದ ಆತನನ್ನು ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಲಾಕಪ್ ಡೆತ್ ಆರೋಪದ ಮೇಲೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪಿಐ ಸೇರಿ ನಾಲ್ವರನ್ನು ಅಮಾನುತು ಮಾಡಲಾಗಿದೆ. ಸಿಸಿಬಿ ಪಿಐ ವಿರೇಶ್ ಅವರನ್ನು ವಿವೇಕನಗರ ಠಾಣೆಯ ಪ್ರಭಾರಿ ಇನ್ಸ್ಪೆಕ್ಟರ್ ಆಗಿ ನಿಯೋಜಿಸಲಾಗಿದೆ ಎಂದು ಆದೇಶಲ್ಲಿ ತಿಳಿಸಲಾಗಿದೆ.
ಪ್ರಕರಣದ ವಿವರ: ನವೆಂಬರ್ 15ರಂದು ದರ್ಶನ್ ಕುಡಿದು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ. ಈ ವೇಳೆ ಮಾರಕಾಸ್ತ್ರ ತೋರಿಸಿದ್ದಾನೆ ಎಂಬ ದೂರು ಆಧರಿಸಿ, ಆತನನ್ನು ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ನಂತರ 8 ದಿನ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿತ್ತು. ಅಲ್ಲಿ ದರ್ಶನ್ ಮೃತಪಟ್ಟಿದ್ದ. ಈ ಸಂಬಂಧ ವಿವೇಕನಗರ ಠಾಣೆ ಪೊಲೀಸರ ಮೇಲೆ ಗಂಭೀರ ಆರೋಪ ವ್ಯಕ್ತವಾಗಿತ್ತು.
Laxmi News 24×7