ಹಾವೇರಿ: ವಿಧಾನಸೌಧದಿಂದ ಬೆಳಗಾವಿ ಸುವರ್ಣಸೌಧಕ್ಕೆ ಯಾವ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎನ್ನುವ ಕುರಿತಂತೆ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು.
ಮಂಗಳವಾರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರತಿ ಬಾರಿ ಬೆಳಗಾವಿ ಅಧಿವೇಶನ ಬಂದಾಗಲೂ ಈ ಬಗ್ಗೆ ಚರ್ಚೆಯಾಗುತ್ತದೆ. ನಮ್ಮ ಸರ್ಕಾರವಿದ್ದಾಗ, ಬಿಜೆಪಿ ಸರ್ಕಾರವಿದ್ದಾಗ ಸಹ ಈ ಬಗ್ಗೆ ಚರ್ಚೆಯಾಗಿದೆ. ಕೆಲವು ಇಲಾಖೆಗಳನ್ನು ಸುವರ್ಣಸೌಧಕ್ಕೆ ವರ್ಗಾಯಿಸಲಾಗಿತ್ತು. ಆದರೆ ಇಲಾಖೆಯ ಅಧಿಕಾರಿಗಳು ವಿಧಾನಸಭೆ ಮುಖ್ಯಕಚೇರಿ ಮತ್ತು ಸುವರ್ಣ ಸೌಧದಲ್ಲಿ ಶಾಖಾ ಕಚೇರಿ ಮಾಡಿಕೊಳ್ಳುತ್ತಾರೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲಕ್ಕಿಂತ ತೊಂದರೆಯೇ ಜಾಸ್ತಿಯಾಗುತ್ತದೆ ಎಂದು ಹೇಳಿದರು.
ಬೆಂಗಳೂರು ಕಚೇರಿಗೆ ಹೋದರೆ ಬೆಳಗಾವಿ ಸುವರ್ಣಸೌಧಕ್ಕೆ ಹೋಗಿದ್ದಾರೆ ಎನ್ನುತ್ತಾರೆ. ಸುವರ್ಣಸೌಧಕ್ಕೆ ಹೋದರೆ ಬೆಂಗಳೂರು ವಿಧಾನಸೌಧದಲ್ಲಿದ್ದಾರೆ ಎಂದು ಜನಸಾಮಾನ್ಯರಿಗೆ ತೊಂದರೆ ನೀಡುತ್ತಾರೆ. ಸುವರ್ಣಸೌಧಕ್ಕೆ ಇಲಾಖೆಗಳ ಸ್ಥಳಾಂತರ ಕುರಿತಂತೆ ಸಿಎಂ ಸಿದ್ದರಾಮಯ್ಯ ಜೊತೆ ಗಂಭೀರವಾಗಿ ಚರ್ಚೆ ಮಾಡುತ್ತೇನೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನಾನು, ಸಭಾಧ್ಯಕ್ಷರು(ಸ್ಪೀಕರ್) ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಈ ಹಿಂದೆ ಯಾವ ರೀತಿಯಾಗುತ್ತಿತ್ತೋ ಅದೇ ರೀತಿ ಈ ಬಾರಿ ಸಹ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಮೊದಲು ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗುತ್ತಿತ್ತು. ಈಗ ಆ ಸಮಸ್ಯೆ ಇಲ್ಲ ಎಂದು ಡೆಪ್ಯೂಟಿ ಸ್ಪೀಕರ್ ಮಾಹಿತಿ ನೀಡಿದರು.
Laxmi News 24×7