ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಮುಂದುವರೆಯುವೆ ಎಂದು ಪದೇಪದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಲೇ ಇದ್ದು, ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದ್ದು, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ. ಸಿಎಂ ಆದವರು ನಾನೇ ಇನ್ನೂ ೨ ವರ್ಷ ಅಧಿಕಾರದಲ್ಲಿರುತ್ತೇನೆ ಎಂದು ಹೇಳುವ ಅಗತ್ಯವೇನಿದೆ..? ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣಪತ್ರ ಕೊಟ್ಟುಕೊಳ್ಳುತ್ತಿರುವುದೇಕೆ..? ಅವರ ಅಧಿಕಾರದ ಬಗ್ಗೆ ನಾವೇನಾದರೂ ಪ್ರಶ್ನೆ ಮಾಡಿದ್ದೇವಾ..? ಹಾಗಿದ್ದರೂ ಈ ಬಗ್ಗೆ ಸ್ಪಷ್ಟತೆ ನೀಡುವ ಅಗತ್ಯ ಏನಿದೆ..? ಎಂದು ಡಿ.ಕೆ.ಶಿವಕುಮಾರ್ ಸಿಎಂ ಬಿಎಸ್ವೈ ಅವರನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಫಲಿತಾಂಶದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಡಿಕೆಶಿ, ಈ ಫಲಿತಾಂಶದಿAದ ನಮಗೆ ಸಮಾಧಾನವಾಗಿದೆ. ಅಧಿಕಾರವಿದೆ ಎಂದು ಕೆಲವರು ನಮ್ಮವರನ್ನು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ವಿರೋಧ ಪಕ್ಷದಲ್ಲಿದ್ದರೂ ನಮಗೆ ಉತ್ತಮ ಫಲಿತಾಂಶ ಸಿಕ್ಕಿದೆ. ಹಳ್ಳಿ ಜನ ಆಪರೇಷನ್ ರಾಜಕಾರಣದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.