Breaking News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ

Spread the love

ಬೆಳಗಾವಿ: ಗೋಕಾಕ್ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿತು.

ಸೋಮವಾರ ಸಂಜೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ತಮ್ಮ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಗೋಕಾಕ್ ಶೂನ್ಯ ಸಂಪಾದನಾ ಮಠದ ಮುರುಘ ರಾಜೇಂದ್ರ ಸ್ವಾಮೀಜಿ, ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಅಮರ ಸಿದ್ದೇಶ್ವರ ಸ್ವಾಮೀಜಿ, ಮುಖಂಡ ಅಶೋಕ ಪೂಜಾರಿ ಸೇರಿ ಮತ್ತಿತರರು ಇದ್ದರು.ಮುಖ್ಯಮಂತ್ರಿಗಳ ಭೇಟಿ ಬಳಿಕ‌ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜನೆ ವಿಚಾರಕ್ಕೆ ಇತಿಶ್ರೀ ಹಾಡುವಂತೆ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಮೇಲೆ ನಾವು ಒತ್ತಡ ಹೇರುತ್ತಿದ್ದೇವೆ. ಗೋಕಾಕ್ ಮತ್ತು ಚಿಕ್ಕೋಡಿ ಜಿಲ್ಲೆ ಆಗಬೇಕು ಅಂತಾ ಬೇಡಿಕೆ ಇಟ್ಟಿದ್ದೇವೆ. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರ ಸಭೆ ಕರೆದು, ಅಂತಿಮ ನಿರ್ಣಯ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಇದೇ ಮೊದಲ ಬಾರಿ ಮುಖ್ಯಮಂತ್ರಿಗಳು ಶಾಸಕರ ಸಭೆ ಕರೆಯುತ್ತಿದ್ದಾರೆ.

20 ವರ್ಷಗಳ ಹಿಂದೆ ಆಯೋಗಗಳು ಶಿಫಾರಸು ಮಾಡಿರುವಂತೆ ಗೋಕಾಕ್, ಚಿಕ್ಕೋಡಿ‌ ಜಿಲ್ಲೆ ಆಗಬೇಕು. ಅಥಣಿ, ಬೈಲಹೊಂಗಲ ಜಿಲ್ಲೆ ಆಗುವುದು ಕಷ್ಟದ ಕೆಲಸ. ಆರ್ಥಿಕ ಹಿನ್ನೆಲೆ ಸೇರಿ ಎಲ್ಲ ಸೌಲಭ್ಯಗಳ ಆಧಾರದ ಮೇಲೆ ಗೋಕಾಕ್, ಚಿಕ್ಕೋಡಿ ಜಿಲ್ಲೆಯಾದರೆ ಒಳ್ಳೆಯದು. ಆದಷ್ಟು ಬೇಗನೇ ಇತ್ಯರ್ಥ ಪಡಿಸುವಂತೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಎರಡು ದಿನಗಳಲ್ಲಿ ಸಭೆ ಕರೆಯುವುದಾಗಿ ಸಿಎಂ ಹೇಳಿದ್ದಾರೆ. ಸಭೆಯಲ್ಲಿ ಏನು ಅಭಿಪ್ರಾಯ ಬರುತ್ತದೆ ನೋಡೋಣ ಎಂದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ್ ಜಿಲ್ಲೆ ಮಾಡುವಂತೆ ಹೇಳಿದ್ದೇವೆ. ಮುಖ್ಯಮಂತ್ರಿಗಳು ಇದಕ್ಕೆ ಸ್ಪಂದಿಸಿದ್ದಾರೆ. ದೊಡ್ಡ ಜಿಲ್ಲೆ ಆಗಿರುವ ಬೆಳಗಾವಿಯನ್ನು ಆಡಳಿತದ ದೃಷ್ಟಿಯಿಂದ ವಿಭಜನೆ ಮಾಡಬೇಕು ಎಂದಿದ್ದಾರೆ. ಬೆಳಗಾವಿ ಜಿಲ್ಲೆಯ ಎಲ್ಲಾ 18 ಶಾಸಕರನ್ನು ಕರೆದು ಅಭಿಪ್ರಾಯ ಪಡೆದು ನಿರ್ಣಯ ಮಾಡೋದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಇನ್ನು ಜಿಲ್ಲಾ ವಿಭಜನೆಯಾದರೆ ಮೊದಲು ಗೋಕಾಕ ಜಿಲ್ಲೆ ಆಗಲಿ ಅಂತಾ ನಾವೆಲ್ಲಾ ಹೇಳಿದ್ದೇವೆ. ಆಯೋಗಗಳ ವರದಿಯಂತೆ ಗೋಕಾಕ್ ಜಿಲ್ಲೆ ಮಾಡಬೇಕೆಂದು ಒತ್ತಾಯ ಮಾಡಿದ್ದೇವೆ. ಈ ಅಧಿವೇಶನದಲ್ಲಿ ಜಿಲ್ಲಾ ವಿಭಜನೆ ಆಗುವ ಆಶಯ ಇದೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ