ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡದೇ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹಲಗಾ ಗ್ರಾಮದ ಬಳಿ ನಡೆಯಿತು.
ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಸಮಾವೇಶ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಭ್ರಷ್ಟ ಸರ್ಕಾರ ತೊಲಗುವವರೆಗೂ ಬಿಜೆಪಿ ಹೋರಾಟ ಮಾಡಲಿದೆ ಎಂದು ಘೋಷಿಸಿ ರಣಕಹಳೆ ಮೊಳಗಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಹಸಿರು ಟಾವೆಲ್ಗಳನ್ನು ಗಾಳಿಯಲ್ಲಿ ತಿರುಗಿಸಿ ಎಚ್ಚರಿಕೆ ಸಂದೇಶ ರವಾನಿಸಿದರು. ಇದೇ ವೇದಿಕೆಯಿಂದ ಸುಮಾರು 2 ಕಿ.ಮೀ. ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಸುವರ್ಣ ವಿಧಾನಸೌಧದತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹಲಗಾ ಸಮೀಪ ಬರುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ತಡೆಯೊಡ್ಡಿದರು. ಈ ವೇಳೆ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ಎ.ಎಸ್. ಪಾಟೀಲ ನಡಹಳ್ಳಿ, ಅಭಯ ಪಾಟೀಲ, ಎಂ.ಪಿ. ರೇಣುಕಾಚಾರ್ಯ ಸೇರಿ ಹಲವು ಪ್ರಮುಖರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದರು.
ಇದಕ್ಕೂ ಮೊದಲು ನಡೆದ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಕಳೆದ ಎರಡೂವರೇ ವರ್ಷದಲ್ಲಿ ಎರಡೂವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30ಕ್ಕೂ ಹೆಚ್ಚು ಕಬ್ಬು ಬೆಳೆಗಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಅವೈಜ್ಞಾನಿಕ ಬೆಳೆ ಪರಿಹಾರ ಘೋಷಿಸಿ ರೈತರ ಗಾಯದ ಮೇಲೆ ಬರೆ ಎಳೆದಿದೆ. ಕನಿಷ್ಠ ಪಕ್ಷ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರನ್ನು ಭೇಟಿ ಮಾಡಲು ಇವರಿಗೆ ಆಗಿಲ್ಲ. ಸಚಿವರು ಎಸಿ ರೂಮ್ನಲ್ಲಿ ಕುಳಿತು ಮಜಾ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Laxmi News 24×7