ರಾಯಚೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸೂಗೂರು ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ.
ಬಸವರಾಜ್ (36) ಮೃತ ನಿರ್ವಾಹಕ ಎಂದು ಗುರುತಿಸಲಾಗಿದೆ. ಇವರು ಮೂಲತಃ ಲಿಂಗಸೂಗೂರು ತಾಲೂಕಿನವರು ಎಂದು ತಿಳಿದು ಬಂದಿದೆ. ಅಂಜಳ – ದೇವದುರ್ಗ ಮಾರ್ಗದ ಬಸ್ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದದಲ್ಲಿ ತೀವ್ರ ಗಾಯಗೊಂಡಿದ್ದ ಇವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಫಂದಿಸದೆ ಕೊನೆಯುಸಿರೆಳೆದಿದ್ದಾರೆ.
ಅಲ್ಲದೆ, ಘಟನೆಯಲ್ಲಿ ಬಸ್ ಚಾಲಕ ಹಾಗೂ ಸುಮಾರು 40 ಪ್ರಯಾಣಿಕರಲ್ಲಿ 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕೆಲ ಪ್ರಯಾಣಿಕರು ಹಾಗೂ ಚಾಲಕನನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರಿಗೆ ದೇವದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಅಪಘಾತಕ್ಕೀಡಾದ ಬಸ್ ದೇವದುರ್ಗ ಘಟಕಕ್ಕೆ ಸೇರಿದ್ದಾಗಿದೆ. ಅಂಜಳಾ ಗ್ರಾಮದಿಂದ ದೇವದುರ್ಗಕ್ಕೆ ತೆರಳುತ್ತಿದ್ದ ವೇಳೆ, ಮಾರ್ಗಮಧ್ಯ ಅಂಚೆಸೂಗೂರು ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಷಿಯಾಗಿದೆ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ.
Laxmi News 24×7