ಚಿಕ್ಕೋಡಿ: ದೇಶದಲ್ಲಿ ಸ್ವಯಂಕೃತವಾಗಿ ಮತಕಳ್ಳತನ ಮಾಡುವವರ ಮೇಲೆ ಪ್ರಧಾನಿ ಮೋದಿ ಅಂಕುಶ ಹಾಕುವ ಕೆಲಸ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ವೋಟ್ ಚೋರಿ ಅನ್ನುತ್ತಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಿಡಿಕಾರಿದರು.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಅಶ್ವರೋಡ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯಿಂದ ಮತಗಳ್ಳತನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಗೃಹ ಸಚಿವರಿಂದ ಕೆಲಸ ಆಗುತ್ತಿದೆ. ದೇಶದಲ್ಲಿನ ವಿಭಜಕ ಶಕ್ತಿಗಳ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
ಇವತ್ತು ಶಿವಾಜಿ ಮಹಾರಾಜರ ಬಗ್ಗೆ ಮಾತನಾಡುತ್ತಿದ್ದೇವೆ. ಒಳ್ಳೆಯ ಕಾರ್ಯಕ್ರಮವಾಗಿದೆ. ದೇಶ ಭಕ್ತಿಯ ಬಗ್ಗೆ ನಾವೆಲ್ಲರೂ ಮಾತಾಡಬೇಕಿದೆ ಎಂದು ಸಲಹೆ ನೀಡಿದರು.
ನವದೆಹಲಿಯಲ್ಲಿ ಕಾಂಗ್ರೆಸ್ ‘ವೋಟ್ ಚೋರ್, ಗಡ್ಡಿ ಛೋಡ್’ ರ್ಯಾಲಿ: ಕಾಂಗ್ರೆಸ್ ಇಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ‘ವೋಟ್ ಚೋರ್, ಗಡ್ಡಿ ಛೋಡ್’ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಪಕ್ಷದ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣಾ ಆಯೋಗ ಬಿಜೆಪಿಯ ಆದೇಶದಂತೆ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ 75 ಲಕ್ಷ ಮಹಿಳೆಯರಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸಿದ್ದನ್ನು ಅವರು ಪ್ರಶ್ನಿಸಿದರು.
Laxmi News 24×7