ಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ರಾಜ್ಯ ಕಾಂಗ್ರೆಸ್ ಪಕ್ಷ ಸುವರ್ಣಸೌಧದಲ್ಲಿಂದು ಪ್ರತಿಭಟನೆ ನಡೆಸಿತು.
ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ED ದುರುಪಯೋಗ ಮಾಡಿದ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.
ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿದೆ. ಏಪ್ರಿಲ್ 9 ರಂದು ಪಿಎಂಎಲ್ಎ ಅಡಿ ಗಾಂಧಿ ಕುಟುಂಬ ಮತ್ತು ಇತರ ಆರೋಪಿಗಳ ವಿರುದ್ಧ ED ಚಾರ್ಜ್ಶೀಟ್ ಸಲ್ಲಿಸಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ED ಸಲ್ಲಿಸಿರುವ ದೂರು ವಿಚಾರಣೆಗೆ ಅರ್ಹವಲ್ಲ. ಏಕೆಂದರೆ ಈ ಪ್ರಕರಣ ಖಾಸಗಿ ದೂರನ್ನು ಆಧರಿಸಿದೆಯೇ ಹೊರತು ಪ್ರಥಮ ಮಾಹಿತಿ ವರದಿ ಆಧರಿಸಿ ಅಲ್ಲ ಎಂದು ತೀರ್ಪು ನೀಡಿತ್ತು.
ಬಿಜೆಪಿಯವರದ್ದು ದ್ವೇಷದ ರಾಜಕಾರಣ: ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ಬಿಜೆಪಿಯರ ದ್ವೇಷದ ರಾಜಕಾರಣ. ಬಿಜೆಪಿಯಲ್ಲಿ ದೆಹಲಿಯಲ್ಲಿ ಅಧಿಕಾರ ಇದೆ. ಕಾಂಗ್ರೆಸ್ನವರನ್ನು ಗುರಿಯಾಗಿಸಿ ಕೋರ್ಟ್ನಲ್ಲಿ ಅಲೆಸುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಅಪರಾಧಿಗಳನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ. ಅಸತ್ಯ ವಿಚಾರ ಮೂಲಕ ಈ ರೀತಿ ಟಾರ್ಗೆಟ್ ಮಾಡುತ್ತಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ನಿರುದ್ಯೋಗ ತಾಂಡವ ಆಡುತ್ತಿದೆ. ತೆರಿಗೆ ಯದ್ವಾತದ್ವ ಹಾಕಿ ಅದರ ಮೂಲಕ ದೇಶವನ್ನು ಸಾಲಗಾರ ರಾಷ್ಟ್ರವಾಗಿ ಮಾಡುತ್ತಿದ್ದಾರೆ. ಈ ವೈಫಲ್ಯವನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟದ ಬಗ್ಗೆ ಜನರಿಗೆ ತಿಳಿಸಲು ಆರಂಭ ಮಾಡಿದ್ದರು. ಅದು ವೈಯ್ಯಕ್ತಿಕ ಆಸ್ತಿ ಅಲ್ಲ. ಅದು ಕಾಂಗ್ರೆಸ್ ಪಕ್ಷದ ಆಸ್ತಿ. ನ್ಯಾಯಾಲಯ ED ದೋಷಾರೋಪಪಟ್ಟಿ ರದ್ದು ಮಾಡಿದೆ. ದ್ವೇಷದ ರಾಜಕಾರಣ ಮಾಡಿರುವುದು ಈಗ ಸಾಬೀತಾಗಿದೆ ಎಂದು ಕಿಡಿಕಾರಿದರು.
Laxmi News 24×7