ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು.
ಈ ಸಂದರ್ಭದಲ್ಲಿ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿದೆ.
ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದವು. ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅದರಲ್ಲಿದ್ದ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನೆ ಕುರಿತಂತೆ ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಬಿ.ಟಿ., ”ರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.
ಎದುರುಗಡೆಯಿಂದ ಲಾರಿ ಬಂದು ಬಸ್ಗೆ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ.
ಘಟನೆಯಲ್ಲಿ ಲಾರಿ ಚಾಲಕನೂ ಸಾವನಪ್ಪಿದ್ದು, ಮೃತದೇಹವನ್ನು ಆಸ್ಪತ್ರೆ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ.
12 ಜನ ಗಾಯಗಳುಗಳು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 9 ಜನ ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
30ಕ್ಕೂ ಅಧಿಕ ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂಬ ಮಾಹಿತಿ ಇದೆ. ಇದು ಲಾರಿ ಚಾಲಕನ ಅಜಾಗರೂಕತೆಯಿಂದ ಆಗಿದೆ. ಮೃತದೇಹಗಳನ್ನು ಗುರುತಿಸುವ ಕೆಲಸ ಆಗಬೇಕಿದೆ. ಎಷ್ಟು ಜನರು ಮೃತರಾಗಿದ್ದಾರೆ ಎಂಬುದು ಇನ್ನೂ ತಿಳಿದುಬರಬೇಕಿದೆ” ಎಂದು ತಿಳಿಸಿದರು.
ಬಸ್ನಲ್ಲಿದ್ದ ಪ್ರಯಾಣಿಕರಾದ ಹೇಮಾ ರಾಜ್ ಪ್ರತಿಕ್ರಿಯಿಸಿ, “ನಾನು ಸುರಕ್ಷಿತವಾಗಿದ್ದು, ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಬೇಕಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುವ ಎಸಿ ಸ್ಲಿಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದೆ. ಎದುರುಗಡೆಯಿಂದ ಏಕಾಏಕಿ ಲಾರಿ ಬಂದು ಬಸ್ಗೆ ಅಪ್ಪಳಿಸಿತು. ತಕ್ಷಣ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಲಾರಿ ಹಾಗೂ ಬಸ್ ಎರಡೂ ಸುಟ್ಟು ಕರಕಲಾದವು. ನಾವು ಹೇಗೋ ಸಾಹಸಪಟ್ಟು ಬಸ್ನಿಂದ ಹೊರಬಂದೆವು. ಅಪಘಾತ ನಡೆದಾಗ ನಾವೆಲ್ಲರೂ ನಿದ್ರೆಗೆ ಜಾರಿದ್ದೆವು.
ಆಗ ನಾನು ನನ್ನ ಪತ್ನಿ, ನನ್ನ ಮಗ ಬಸ್ನ ಕಿಟಕಿಯಿಂದ ಹೊರಗಡೆ ಜಿಗಿದು ಪ್ರಾಣ ಉಳಿಸಿಕೊಂಡೆವು.
ನಾನು ಕೆಲ ಜನರನ್ನು ಉಳಿಸಲು ಪ್ರಯತ್ನಿಸಿದೆ. ಆದರೆ ಆಗ ಬಸ್ನ ಮುಂದಿನ ಬಾಗಿಲು ಲಾಕ್ ಆಗಿತ್ತು.
ಆದರೂ ಲಾಕ್ ಓಪನ್ ಮಾಡಲು ಯತ್ನಿಸಿದೆ, ಆದರೆ ಅನ್ಲಾಕ್ ಆಗಲಿಲ್ಲ. ಬಸ್ನ ಹಿಂದಿನ ಭಾಗದಲ್ಲಿದ್ದವರು ಸಜೀವ ದಹನ ಆಗಿರಬಹುದು, ಮುಂದೆ ಇದ್ದವರು ಬದುಕುಳಿದಿದ್ದಾರೆ” ಎಂದರು.
Laxmi News 24×7