ಬೆಂಗಳೂರು: ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವ ಜೊತೆಗೆ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟು ಪಂಚಾಯಿತಿ, ವಾರ್ಡ್, ಬೂತ್ ಸಮಿತಿಗಳ ರಚನೆ ಕುರಿತು ಸ್ಥಳೀಯಮಟ್ಟದಲ್ಲಿ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ (ಮೈಸೂರು, ಬೆಂಗಳೂರು, ಬೆಳಗಾವಿ, ಕಲಬುರ್ಗಿ) ಜ. 6ರಿಂದ ಸಭೆಗಳನ್ನು ಆಯೋಜಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ.
ಜ 6ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿರುವ ಸಾಗರ ಆಡಿಟೋರಿಯಂನಲ್ಲಿ ಶಿವಮೊಗ್ಗ ಜಿಲ್ಲೆಯೂ ಸೇರಿದಂತೆ ಮೈಸೂರು ವಿಭಾಗ, 8ರಂದು ಬೆಂಗಳೂರಿನ ಆರ್.ವಿ. ಕಾಲೇಜಿನ ಪೂರ್ಣಿಮಾ ಪ್ಯಾಲೆಸ್ನಲ್ಲಿ ಮಂಡ್ಯ ಜಿಲ್ಲೆಯೂ ಸೇರಿದಂತೆ ಮೈಸೂರು ವಿಭಾಗ, 11ರಂದು ಹುಬ್ಬಳ್ಳಿ ಕಾಟನ್ ಕೌಂಟಿ ರೆಸಾರ್ಟ್ನಲ್ಲಿ ದಾವಣಗೆರೆಯೂ ಸೇರಿದಂತೆ ಬೆಳಗಾವಿ ವಿಭಾಗ ಮತ್ತು 18ರಂದು ಕಲಬುರ್ಗಿ ನಗರದಲ್ಲಿ ಕಲಬುರ್ಗಿ ವಿಭಾಗದ ಸಭೆ ನಡೆಯಲಿದೆ.
‘ಈ ಸಭೆಗಳಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಸತೀಶ ಜಾರಕಿಹೊಳಿ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ಎಐಸಿಸಿ ಪದಾಧಿಕಾರಿಗಳು ಮತ್ತು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ.
‘ಜಿಲ್ಲೆಗಳ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ಅಭ್ಯರ್ಥಿಗಳು, ರಾಜ್ಯಸಭಾ ಸದಸ್ಯರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಂಚೂಣಿ ಘಟಕಗಳ ಪ್ರಮುಖರನ್ನು ಈ ಸಭೆಗೆ ಆಹ್ವಾನಿಸಲಾಗಿದೆ’ ಎಂದೂ ಶಿವಕುಮಾರ್ ಹೇಳಿದ್ದಾರೆ.