ಕಾರವಾರ (ಜ.04): ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸ್ಥಾನದಲ್ಲಿ ಗೆಲುವು ಪಡೆದಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಟಿಕೆಟ್ಗೆ ಈ ಬಾರಿ ಬಿಜೆಪಿಯಲ್ಲಿ ಬೇಡಿಕೆ ಹೆಚ್ಚಾಗಲಿದೆ ಎನ್ನುವ ಮಾತು ಕೇಳಿ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಂದ ಓರ್ವ ವಿಧಾನ ಪರಿಷತ್ ಸದಸ್ಯನನ್ನು ಆಯ್ಕೆ ಮಾಡಿ ಕಳಿಸಲಾಗುತ್ತದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರಿಗೆ ಮತದಾನದ ಹಕ್ಕನ್ನು ಚುನಾವಣೆಯಲ್ಲಿ ನೀಡಲಾಗುತ್ತದೆ. ಇನ್ನು ಪಂಚಾಯತಿ ಸದಸ್ಯರ ಮತಗಳೇ ಹೆಚ್ಚಿರುವ ಹಿನ್ನಲೆಯಲ್ಲಿ ಪರಿಷತ್ ಸದಸ್ಯರ ಆಯ್ಕೆ ಮಾಡುವಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ನಿರ್ಣಾಯಕರಾಗುತ್ತಾರೆ.
ಈ ಹಿಂದೆ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಪಂಚಾಯಿತಿ ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನ ಗೆಲ್ಲುತ್ತಿದ್ದರಿಂದ ಕಳೆದ ಎರಡು ಅವಧಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಿದ್ದ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಪ್ತ ಎಸ್.ಎಲ್.ಘೋಟ್ನೇಕರ್ ಬಹುಮತದಿಂದಲೇ ಪರಿಷತ್ ಸದಸ್ಯರಾಗಿ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರೇ ಅಧಿಕ ಸಂಖ್ಯೆಯಲ್ಲಿ ಗೆದ್ದಿರುವ ಹಿನ್ನಲೆಯಲ್ಲಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೇಟಿಗೆ ಬಾರಿ ಪೈಪೋಟಿ ಎದುರಾಗಲಿದೆ ಎನ್ನಲಾಗಿದೆ.