Breaking News

ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ

Spread the love

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳು ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದೆ‌.

ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ‌ ಸೇರಿದಂತೆ ಸರ್ಕಾರದ ಪ್ರಮುಖ ಸಾಧನೆಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟು 46 ಪುಟಗಳ 122 ಪ್ಯಾರಾಗಳ ಭಾಷಣದಲ್ಲಿ ಕೆಂದ್ರ ಸರ್ಕಾರದ ವಿರುದ್ಧ ಕಟು ಟೀಕೆಯ ಜೊತೆಗೆ ರಾಜ್ಯ ಸರ್ಕಾರಗಳ ಯೋಜನೆ, ಸಾಧನೆಗಳ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.

ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಎಂಬ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಇವುಗಳಿಗೆ ಇದುವರೆಗೆ 1,16,706 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ಈ ಯೋಜನೆಗಳ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲು FPI ಮೂಲಕ ಕಿಂಗ್ಸ್ ಕಾಲೇಜ್ ಲಂಡನ್, ಜಸ್ಟ್‌ ಜಾಬ್ಸ್ ನೆಟ್‌ವರ್ಕ್, ಎಕ್ಸ್‌ಕೆಡಿಆರ್ ಫೋರಮ್, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಇಂಡಸ್ ಆಕ್ಷನ್ ಹಾಗೂ ಲೋಕನೀತಿ/ಸಿಎಸ್‌ಡಿಎಸ್ ನಂತಹ ಪ್ರತಿಷ್ಠಿತ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಈ ಸಂಸ್ಥೆಗಳು ವ್ಯಾಪಕವಾಗಿ ನಡೆಸಿರುವ ಅಧ್ಯಯನಗಳು ರಾಜ್ಯದಲ್ಲಿ ಆಹಾರ ಭದ್ರತೆ, ಬಡತನ ನಿರ್ಮೂಲನೆ ಮತ್ತು ಮಹಿಳಾ ಸಬಲೀಕರಣದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿರುವುದನ್ನು ದೃಢಪಡಿಸಿವೆ. ಜನರು ಗ್ಯಾರಂಟಿ ಯೋಜನೆಗಳ ಮೂಲಕ ಪಡೆಯುವ ಹಣವನ್ನು ಪೌಷ್ಠಿಕ ಆಹಾರ, ಔಷಧಗಳು ಮತ್ತು ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸುತ್ತಿದ್ದಾರೆ ಎಂದು ವಿವರಿಸಲಾಗಿದೆ.GOVERNOR GEHLOT

ಬ್ಯಾಂಕ್‌ ಖಾತೆಗಳಿಗೆ ಸರ್ಕಾರದಿಂದ ನಗದು ವರ್ಗಾವಣೆ ಪಡೆದ ಕುಟುಂಬಗಳ ಪ್ರಮಾಣ 2022 ರಲ್ಲಿ ಶೇ.9.3 ರಷ್ಟಿದ್ದು 2024ರ ವೇಳೆಗೆ ಅದು ಶೇ. 72.7ಕ್ಕೆ ಏರಿಕೆಯಾಗಿದೆ. ಇದು ಗ್ಯಾರಂಟಿ ಯೋಜನೆಗಳ ಸಾರ್ಥಕತೆಗೆ ಸಾಕ್ಷಿಯಾಗಿದೆ. ‘ಶಕ್ತಿ’ ಯೋಜನೆಯು ಮಹಿಳೆಯರ ಬದುಕಿನಲ್ಲಿ ಅಪಾರ ಚೈತನ್ಯ ತಂದಿದೆ. ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಯನದಂತೆ, ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳೂ ಸೇರಿದಂತೆ ಅನೇಕ ಮಾರ್ಗಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದ್ದು, ಇದು ನಗರದ ಚಲನಶೀಲತೆಯಲ್ಲಿ ಆದ ಪ್ರಮುಖ ಬದಲಾವಣೆಯಾಗಿದೆ. ಈ ಯೋಜನೆಯಿಂದ ಪ್ರತಿ ಮಹಿಳೆಗೆ ಮಾಸಿಕ ಸರಾಸರಿ ರೂ.1,500 ರಿಂದ 2,000 ಉಳಿತಾಯವಾಗುತ್ತಿದೆ. ರಾಜ್ಯಾದ್ಯಂತ ಶೇ.19 ರಷ್ಟು ಮತ್ತು ಬೆಂಗಳೂರಿನಲ್ಲಿ ಶೇ.34ರಷ್ಟು ಮಹಿಳೆಯರು ಉತ್ತಮ ಸಂಬಳದ ಕೆಲಸಗಳನ್ನು ಪಡೆಯಲು ಈ ಯೋಜನೆ ನೆರವಾಗಿದೆ. ಶೇ.83 ರಷ್ಟು ಜನರು ಉತ್ತಮ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು‌ ವಿವರಿಸಲಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ