ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭ; ನಶಾಮುಕ್ತ ರಾಷ್ಟ್ರನಿರ್ಮಾಣ ಸಂಕಲ್ಪ
ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ನಾಯಕತ್ವ ಗುಣ ಬೆಳೆಸುವ ವೇದಿಕೆ: ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಸಹಯೋಗದಲ್ಲಿ ನಗರದ ಸೇಂಟ್ ಅಂಥೋನಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರು ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ನಾಯಕತ್ವ ಗುಣವನ್ನು ಬೆಳೆಸುವ ವೇದಿಕೆಯಾಗಿದೆ. ಇದರಿಂದ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸೇರ್ಪಡೆಯಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಶಿಸ್ತುಬದ್ಧ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಎಲ್ಲ ಕಾರ್ಯಕ್ರಮಗಳಿಗೆ ಜಿಲ್ಲಾ ಪಂಚಾಯತ ವತಿಯಿಂದ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದರು.
*ರಾಜ್ಯದಲ್ಲಿ 8 ಲಕ್ಷ ವಿದ್ಯಾರ್ಥಿಗಳು:*
ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರು ಮಾತನಾಡಿ, ದೇಶಾದ್ಯಂತ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ 2 ಕೋಟಿ ವಿದ್ಯಾರ್ಥಿಗಳು ಇದ್ದು, ರಾಜ್ಯದಲ್ಲಿ 8 ಲಕ್ಷ ಮಕ್ಕಳು ಇದ್ದಾರೆ. ಮುಂದೆಯೂ ಕೂಡ ರಾಜ್ಯದಲ್ಲಿ ಸೇರ್ಪಡೆಯಾಗುವ ಮಕ್ಕಳ ಸಂಖ್ಯೆ ಹೆಚ್ಚಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 64 ಸಾವಿರ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಇದ್ದು, ಮುಂಬರುವ ದಿನಗಳಲ್ಲಿ ಒಂದು ಲಕ್ಷದವರೆಗೆ ವಿದ್ಯಾರ್ಥಿಗಳು ಸೇರ್ಪಡೆಯಾಗುವ ವಿಶ್ವಾಸವಿದೆ ಎಂದು ಆಶಯ ವ್ಯಕ್ತಪಡಿಸಿದರು.
ಮಾನವ ಸಂಪನ್ಮೂಲಗಳ ಗುಣಗಳ ಮೇಲೆ ದೇಶದ ಅಭಿವೃದ್ಧಿಯನ್ನು ಅಳೆಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯನಿರ್ವಹಿಸುತ್ತಿದೆ. ಇದರಿಂದ ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಗೆ ಸಹಕಾರಿಯಾಗುತ್ತಿದೆ. ಮಾನವೀಯ ಮೌಲ್ಯಗಳನ್ನು ಬೆಳೆಸಲಾಗುತ್ತಿದೆ ಎಂದು ಹೇಳಿದರು.
*ಪ್ರತಿಜ್ಞಾವಿಧಿ ಸ್ವೀಕಾರ:*
ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಬೆಳಗಾವಿ ವಿಭಾಗದ ಮುಖ್ಯಸ್ಥರಾದ ಅಂಬಿಕಾ ಬ್ರಹ್ಮಕುಮಾರಿ ಅವರು ನಶಾ ಮುಕ್ತಿ ಅಭಿಯಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ನಶಾ ಮುಕ್ತಿ ಅಭಿಯಾನದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.
*ಪ್ರಶಸ್ತಿ ಪತ್ರ ವಿತರಣೆ:*
ಕಾರ್ಯಕ್ರಮದಲ್ಲಿ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ, ಕಬ್ಸ್ ಮತ್ತು ಬುಲ್-ಬುಲ್ ವಿದ್ಯಾರ್ಥಿಗಳಿಗೆ ಚತುರ್ಥ ಚರಣ ಹಾಗೂ ಹಿರಕ್ ಪಂಕ್ ಪ್ರಶಸ್ತಿ ಪತ್ರ, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಒಟ್ಟು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಎಸ್.ಬಿ. ಕೊಂಗವಾಡ, ಪಿಎಂ ಪೋಷಣ್ ಅಭಿಯಾನದ ಜಿಲ್ಲಾ ಶಿಕ್ಷಣಾಧಿಕಾರಿ ಲಕ್ಷ್ಮಣರಾವ ಯಕ್ಕುಂಡಿ, ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ, ಗೈಡ್ಸ್ ಆಯುಕ್ತರಾದ ಪ್ರಭಾವತಿ ಪಾಟೀಲ್ ಸೇರಿದಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳು, ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿಯರು, ಸ್ಕೌಟರ್ಗಳು, ಗೈಡರ್ಗಳು, ಶಿಕ್ಷಕರು, ಸಿಬ್ಬಂದಿ ಹಾಗೂ ಇನ್ನಿತರರು ಭಾಗವಹಿಸಿದ್ದರು.
Laxmi News 24×7