ಭೆಂಡಿಗೇರಿ ಗ್ರಾಮಕ್ಕೆ ಹೆಚ್ಚುವರಿ ಬಸ್ಗೆ ಆಗ್ರಹಿಸಿ ಬಸ್ ತಡೆದು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಭೆಂಡಿಗೇರಿ ಗ್ರಾಮದಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದಿಢೀರ್ ಬಸ್ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬಸ್ಗಳ ಅಭಾವದಿಂದಾಗಿ ಪ್ರತಿದಿನ ನೂಕುನುಗ್ಗಲಿನಲ್ಲಿ ಜೀವಭಯದಿಂದ ಪ್ರಯಾಣಿಸುವಂತಾಗಿದ್ದು, ಸಾರಿಗೆ ಸಂಸ್ಥೆಯು ತಕ್ಷಣವೇ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.
ಬೆಳಗಾವಿ ತಾಲೂಕಿನ ಭೆಂಡಿಗೇರಿ ಗ್ರಾಮದಲ್ಲಿ ಬಸ್ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಒಂದೇ ಬಸ್ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರು ತುಂಬಿಕೊಳ್ಳುತ್ತಿರುವುದರಿಂದ ತೀವ್ರ ನೂಕುನುಗ್ಗಲು ಉಂಟಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಶಾಲೆ-ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8:30 ಹಾಗೂ 9:30ಕ್ಕೆ ಮತ್ತು ಸಂಜೆ 4:30 ಹಾಗೂ 5:30ಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಾರಿಗೆ ಅಧಿಕಾರಿಗಳನ್ನು ಒತ್ತಾಯಿಸಿದರು. ಈ ಕುರಿತಾದ ಮನವಿಯನ್ನು ಕೆ.ಎಸ್.ಆರ್.ಟಿ.ಸಿ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ರವಾನಿಸಿದ್ದಾರೆ.
ಇದಲ್ಲದೆ, ಪಾರಿಶ್ವಾಡ-ಬೆಳಗಾವಿ ಮಾರ್ಗವಾಗಿ ಸಂಚರಿಸುವ ಎಲ್ಲಾ ಸರ್ಕಾರಿ ಬಸ್ಗಳಿಗೆ ಭೆಂಡಿಗೇರಿ ಗ್ರಾಮದಲ್ಲಿ ಕಡ್ಡಾಯ ನಿಲುಗಡೆ ನೀಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ದಿನನಿತ್ಯ ನೂಕುನುಗ್ಗಲಿನಲ್ಲಿ ಸಂಚರಿಸುವ ವಿದ್ಯಾರ್ಥಿಗಳ ಜೀವದ ಜೊತೆ ಸಾರಿಗೆ ಇಲಾಖೆ ಆಟವಾಡಬಾರದು ಎಂದು ಎಚ್ಚರಿಸಿದ ಪ್ರತಿಭಟನಾಕಾರರು, ಒಂದು ವೇಳೆ ತಮ್ಮ ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ರೂಪಿಸುವುದಾಗಿ ಸಾರಿಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Laxmi News 24×7