Home / ರಾಜ್ಯ / ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಿದ ಡಿಸಿಎಂ

ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಿದ ಡಿಸಿಎಂ

Spread the love

ರಾಮನಗರ: ರಾಜ್ಯದ ಸರಕಾರಿ ಪದವಿ, ಎಂಜನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜುಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ ಕುಟುಂಬಗಳ ಪ್ರತಿಭಾವಂತ ನೂರು ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ ಈ ವಿಷಯವನ್ನು ಡಿಸಿಎಂ ಪ್ರಕಟಿಸಿದರು.

ಡಿಜಿಟಲ್‌ ಯುಗದಲ್ಲಿ ಮಕ್ಕಳ ಸಮಗ್ರ ಕಲಿಕೆ ಹಾಗೂ ಖಾಸಗಿ-ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನಡುವೆ ಡಿಜಿಟಲ್‌ ಅಂತರವನ್ನು ಅಳಸಿ ಹಾಕಲು ಉಚಿತ ಟ್ಯಾಬ್‌ಗಳನ್ನು ವಿತರಿಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರಕಾರಿ ಎಂಜನಿಯರಿಂಗ್‌ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಸರಕಾರ 155.4 ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಸರಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರು. ಇಂಥ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಟ್ಯಾಬ್ಲೆಟ್‌ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್‌ ಅಂತರವನ್ನು ಸಂಪೂರ್ಣವಾಗಿ ಅಳಿಸಿಹಾಕಿದಂತಾಗಿದೆ ಎಂದರು ಡಿಸಿಎಂ.

155.4 ಕೋಟಿ ರೂ. ವೆಚ್ಚ:

ಈ ಟ್ಯಾಬ್ಲೆಟ್‌ಗಳ ಖರೀದಿಗೆ ಒಟ್ಟು 155.4 ಕೋಟಿ ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್‌ ಅನ್ನು 10 ಸಾವಿರ ರೂ. ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ. ಸರಕಾರಿ ಪದವಿ ಕಾಲೇಜುಗಳಲ್ಲಿ ಪ್ರಥಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 11,500 ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳನ್ನು ಕೊಡಲಾಗುತ್ತದೆ. ಇವಿಷ್ಟೂ ಟ್ಯಾಬ್ಲೆಟ್‌ಗಳ ಖರೀದಿಗೆ 115 ಕೋಟಿ ರೂ. ವೆಚ್ಚವಾಗುತ್ತಿದೆ. ಹಾಗೆಯೇ, ಪಾಲಿಟೆಕ್ನಿಕ್‌ಗಳಲ್ಲಿ ಓದುತ್ತಿರುವ ಪ್ರಥಮ ಮತ್ತು ದ್ವಿತೀಯ ವರ್ಷದ 28,908 ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಟ್ಯಾಬ್ಲೆಟ್‌ಗಳಿಗೆ 28.91 ಕೋಟಿ ರೂ. ಹಾಗೂ ಎಂಜಿನಿಯರಿಗ್‌ ಕಾಲೇಜುಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 11,488 ವಿದ್ಯಾರ್ಥಿಗಳ ಟ್ಯಾಬ್ಲೆಟ್‌ಗಳಿಗೆ 11.49 ಕೋಟಿ ರೂ. ಸೇರಿ ಒಟ್ಟು 155.4 ಕೋಟಿ ರೂ. ವೆಚ್ಚವಾಗಲಿದೆ ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಈ ಮುನ್ನವೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್‌ಗಳು ಸಹಾಯಕವಾಗುತ್ತವೆ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ ಎಂದರು ಡಿಸಿಎಂ.

ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಟ್ಯಾಬ್ಲೆಟ್‌ಗಳ ಗುಣಮಟ್ಟ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳ ಬಗ್ಗೆ ಅತಿಹೆಚ್ಚು ಗಮನ ನೀಡಲಾಗಿದೆ. ವೈಫೈ, ಸಿಮ್‌ ಬಳಕೆಯಿಂದ ಇವುಗಳಿಗೆ ಇಂಟರ್‌ನೆಟ್‌ ಸಂಪರ್ಕ ಸಾಧಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್‌ ಬಳಕೆಯ ಮೂಲಕವೇ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಹಾಲು ಉತ್ಪಾದಕರ ಶ್ಲಾಘನೆ:

ಇದೇ ವೇಳೆ ಜಿಲ್ಲಾ ಹಾಲು ಒಕ್ಕೂಟ ಹಾಗೂ ಹಾಲು ಉತ್ಪಾದಕರನ್ನು ಶ್ಲಾಘಿಸಿದ ಅವರು, ರೈತರ ಶ್ರಮದಿಂದ ಒಳ್ಳೆಯ ಕೆಲಸ ಆಗುತ್ತಿದೆ. ರೈತರ ಜೀವನದ ಗುಣಮಟ್ಟ ಸುಧಾರಿಸಲು ಈ ಕ್ರಮ ಕೈಗೊಳ್ಳಕೊಳ್ಳಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದ ಜನರಲ್ಲಿ ವ್ಯತ್ಯಾಸ ಇರಬಾರದು. ಅದಕ್ಕೆ ಪೂರಕವಾಗಿ ಸರ್ಕಾರ ಈ ಕೆಲಸ ಮಾಡಲಾಗುತ್ಯದೆ. ತಂತ್ರಜ್ಞಾನದ ಬಳಕೆ ಮೂಲಕ ಎಲ್ಲವನ್ನೂ ಸಾಧಿಸಬಹುದು ಎಂದರು.

ನಿಮ್ಮ ಮಾರುಕಟ್ಟೆ ಕೇವಲ ಬೆಂಗಳೂರು ಮಾತ್ರ ಅಲ್ಲ. ವಿಶ್ವ ಇವತ್ತು ನಿಮ್ಮ‌ ಮಾರುಕಟ್ಟೆ ಆಗಬೇಕು. ಆ‌ ಮೂಲಕ ನಮ್ಮ ಜೀವನ ಮಟ್ಟ ಸುಧಾರಿಸಿಕೊಳ್ಳಬೇಕು. ಇದನ್ನು ಹಾಲು ಉತ್ಪಾದಕರಿಗೂ ಅನ್ವಯಿಸಿಕೊಳ್ಳಬಹುದು ಎಂದು ಡಿಸಿಎಂ ಕಿವಿಮಾತು ಹೇಳಿದರು.

ರೈತರ ಜತೆ ಸರ್ಕಾರ ಇದೆ. ಹಾಲು ಉತ್ಪಾದಕರು ಆರ್ಥಿಕವಾಗಿ ಶಕ್ತರಾಗಬೇಕು. ಇಡೀ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ರಾಮನಗರ ಜಿಲ್ಲೆಯನ್ನು ಕಟ್ಟೋಣ. ಮುಂದಿನ ದಿನಗಳಲ್ಲಿ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುವುದರ ಜತೆಗೆ, ರೈತರ ಮಕ್ಕಳ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ನುಡಿದರು.

ಹಾಲು ಒಕ್ಕೂಟದ ನಿರ್ದೇಶಕ ಪಿ.ನಾಗರಾಜ ಪ್ರಾಸ್ತಾವಿಕವಾಗಿ‌ ಮಾತನಾಡಿದರು. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ